ಧರ್ಮಸ್ಥಳ: ಕಿನ್ನಿಗೋಳಿ ಕಂಚಿಮಾರು ಪೂಜಾ ಸಮಿತಿಯ ವತಿಯಿಂದ ೧೭ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಭಕ್ತಿ, ಸಂಭ್ರಮ ಹಾಗೂ ಶ್ರದ್ಧೆಯಿಂದ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ. ವಿ. ಶೆಟ್ಟಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎ. ವಿ. ಶೆಟ್ಟಿ, ಶ್ರೀಕೃಷ್ಣನ ಜೀವನ ಮತ್ತು ಸಂದೇಶಗಳು ಇಂದಿನ ಸಮಾಜಕ್ಕೂ ಮಾರ್ಗದರ್ಶಕವಾಗಿವೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜದಲ್ಲಿ ಸಂಸ್ಕಾರ, ಸಾಮರಸ್ಯ ಮತ್ತು ಪರಸ್ಪರ ಬಾಂಧವ್ಯವನ್ನು ಬೆಳೆಸುತ್ತವೆ. ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿರುವ ಕಿನ್ನಿಗೋಳಿ ಕಂಚಿಮಾರು ಪೂಜಾ ಸಮಿತಿಯ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಲಕ್ಷ್ಮೀನಾರಾಯಣ ರಾವ್ ಮಾತನಾಡಿ, ಶ್ರೀಕೃಷ್ಣ ಜನ್ಮಾಷ್ಟಮಿ ಕೇವಲ ಧಾರ್ಮಿಕ ಆಚರಣೆಯಾಗಿರದೆ, ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹತ್ವದ ಸಂದರ್ಭವಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದರಿಂದ ಸಮಾಜದಲ್ಲಿ ಸೌಹಾರ್ದ ಮತ್ತು ಸದ್ಭಾವನೆ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಕೀಲ ಕೇಶವ, ಪ್ರಕಾಶ್ ಹೆಗ್ಡೆ, ವಿಶ್ವನಾಥ, ರಾಜಶೇಖರ್, ಸಂದೇಶ್ ಸೇರಿದಂತೆ ಗಣ್ಯರು ಹಾಗೂ ಪೂಜಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.

