ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹೆಚ್. ರಂಗಾಪುರದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 40 ಚೀಲ ಗೋಧಿಯನ್ನು ಮಣ್ಣಿನಲ್ಲಿ ಹೂತು ಹಾಕಿದ್ದ ಪ್ರಕರಣದಲ್ಲಿ ಶಾಲೆಯ ನಿಕಟಪೂರ್ವ ಪ್ರಾಂಶುಪಾಲ ಬಿ.ಜೆ. ಹರೀಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ: ಪಿ.ಎಸ್. ಕಾಂತರಾಜು ಆದೇಶ ಹೊರಡಿಸಿದ್ದಾರೆ. ಅಮಾನತುಗೊಂಡಿರುವ ಪ್ರಾಂಶುಪಾಲ ಹರೀಶ್ ಪ್ರಸ್ತುತ ತುರುವೇಕೆರೆ ತಾಲೂಕಿನ ದಂಡಿನಶಿವರ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಅನಧಿಕೃತವಾಗಿ ಗೋಧಿಯನ್ನು ಹೂತು ಹಾಕಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ.
ಕರ್ತವ್ಯ ಲೋಪ ಆರೋಪದ ಮೇಲೆ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಿ.ಎಂ. ರವಿ ಅವರನ್ನು ಸಕಲೇಶಪುರ ತಾಲೂಕಿನ ಹೆತ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ವರ್ಗಾವಣೆ ಮಾಡಲಾಗಿದೆ. ಸಮಾಜ ವಿಜ್ಞಾನ ಶಿಕ್ಷಕ ಡಿ. ಲಿಂಗರಾಜು ಅವರನ್ನು ಮಾಗಡಿ ತಾಲೂಕಿನ ತಿಪ್ಪಸಂದ್ರ ಅಂಬೇಡ್ಕರ್ ವಸತಿ ಶಾಲೆಗೆ ವರ್ಗಾಯಿಸಲಾಗಿದೆ.
ಮೇಲಾಧಿಕಾರಿಗಳ ಆದೇಶ ಪಾಲನೆ ಮಾಡದ ಹಿನ್ನೆಲೆಯಲ್ಲಿ ಮತ್ತು ಶಾಲೆಯಲ್ಲಿ ಗುಂಪುಗಾರಿಕೆ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ವಸತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಶಾಲಮ್ಮ ಅವರನ್ನು ಸಂಬಂಧಿಸಿದ ಏಜೆನ್ಸಿಗೆ ಹಿಂತಿರುಗಿಸಿ ಬೇರೆ ಸಿಬ್ಬಂದಿ ನಿಯೋಜಿಸಲು ಸೂಚಿಸಲಾಗಿದೆ.

