ಮಡಿಕೇರಿ, ಏಪ್ರಿಲ್ 23: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯಲ್ಲಿರುವ ಭಾರತ್ ಗ್ಯಾಸ್ ಏಜೆನ್ಸಿಯ ಅವ್ಯವಸ್ಥೆಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಜಿಲ್ಲಾಧಿಕಾರಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿರುವ ಸಂಘಟನೆ, ಗ್ಯಾಸ್ ವಿತರಣೆ ಸಮಸ್ಯೆಯಿಂದ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದೆ.
ಸಂಘಟನೆಯ ಪ್ರಕಾರ, ಕಳೆದ ಹಲವಾರು ತಿಂಗಳಿಂದ ಗ್ಯಾಸ್ ಸಿಲಿಂಡರ್ಗಳನ್ನು ಸರಿಯಾಗಿ ವಿತರಿಸಲಾಗುತ್ತಿಲ್ಲ. ಗ್ಯಾಸ್ ಕಚೇರಿ ಬಹುತೇಕ ಸಮಯ ಬೀಗ ಹಾಕಲ್ಪಟ್ಟಿದ್ದು, ಅಧಿಕೃತ ದೂರವಾಣಿ ಸಂಖ್ಯೆಗಳು ಸಹ ಕಾರ್ಯನಿರ್ವಹಿಸುವುದಿಲ್ಲ ಎಂದು ದೂರಲಾಗಿದೆ. ಇದರಿಂದ ತುರ್ತು ಸಂದರ್ಭಗಳಲ್ಲಿ ಜನರು ಸಂಪರ್ಕಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.
ಇದಲ್ಲದೆ, ಗ್ರಾಮೀಣ ಪ್ರದೇಶಗಳಿಗೆ ಗ್ಯಾಸ್ ವಿತರಣಾ ವಾಹನಗಳು ಎರಡು ತಿಂಗಳಿಗೂ ಹೆಚ್ಚು ಕಾಲ ಬಂದಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಅಡುಗೆ ಇಂಧನವಿಲ್ಲದೆ ತೀವ್ರ ಸಂಕಷ್ಟ ಅನುಭವಿಸುತ್ತಿವೆ.
ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಿತ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸುಗಮ ಗ್ಯಾಸ್ ವಿತರಣೆಯನ್ನು ಖಚಿತಪಡಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಒಂದು ವೇಳೆ ಸಮಸ್ಯೆ ತಕ್ಷಣ ಪರಿಹಾರವಾಗದಿದ್ದರೆ, ಭಾರತ್ ಗ್ಯಾಸ್ ಕಚೇರಿ ಎದುರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಎಚ್ಚರಿಕೆ ನೀಡಿದೆ.

