ಪಡುಬಿದ್ರಿ : ಬಂಧಿತ ಆರೋಪಿಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಮಂಜುನಾಥ ಫಕೀರಪ್ಪ ವಾಲಿಕಾರ ಎಂದು ಗುರುತಿಸಲಾಗಿದೆ. ಈತ ಎ.18ರಂದು ಪಡುಬಿದ್ರಿ ಶ್ರೀನಾರಾಯಣ ಗುರು ಮಂದಿರದ ಬಳಿ ಮುಲ್ಕಿ ಕಾರ್ನಾಡಿನ ನಿವಾಸಿ ವಾಸುದೇವ ಶೆಟ್ಟಿಗಾರ್ ಅವರು ನಿಲ್ಲಿಸಿದ್ದ ಬೈಕ್ ಅನ್ನು ಕಳವು ಮಾಡಿಕೊಂಡು ಹೋಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾರ್ಯಾಚರಣೆಯನ್ನು ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್. ವಿಜಯ ಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯ ಎಸ್ಸೈಗಳಾದ ಸಕ್ತಿವೇಲು ಈ. ಮತ್ತು ಅನಿಲ್ ಕುಮಾರ್ ಟಿ. ನಾಯಕ್ ನೇತೃತ್ವದ ವಿಶೇಷ ತಂಡ ಆರೋಪಿಯನ್ನು ವಶಕ್ಕೆ ಪಡೆದಿದೆ.
ಆರೋಪಿಯಿಂದ ಸುಮಾರು 20,000 ರೂ. ಮೌಲ್ಯದ ಕಳವುಗೈದ ಬೈಕ್ನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಎಎಸ್ಸೈ ರಾಜೇಶ್ ಪಿ., ಕೃಷ್ಣಪ್ರಸಾದ್, ಅಶ್ವಿನ್ ಕುಮಾರ್ ಹಾಗೂ ಸಂದೇಶ್ ಭಂಡಾರಿ ಭಾಗವಹಿಸಿದ್ದರು.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

