ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಪರಾರಿ ಬೊಬ್ಬರ್ಯ ದೈವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ, ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರಮಿಸಿದ ಸತೀಶ್ ಪೂಜಾರಿ ಕೀಳಂಜೆ ಅವರಿಗೆ ವಿಶೇಷ ಸನ್ಮಾನ ಮಾಡಲಾಯಿತು.
ದೈವಸ್ಥಾನದ ಜೀರ್ಣೋದ್ಧಾರಕ್ಕಾಗಿ ದಾನಿಗಳಿಂದ ಹಣ ಸಂಗ್ರಹಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಸತೀಶ್ ಪೂಜಾರಿಯವರ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಯಿತು. ಸಭೆಯ ಅಧ್ಯಕ್ಷರಾಗಿದ್ದ ಗುರುರಾಜ್ ಭಟ್ ಅವರು ಮಾತನಾಡಿ, ಜೀರ್ಣೋದ್ಧಾರ ಕಾರ್ಯದಲ್ಲಿ ಸತೀಶ್ ಪೂಜಾರಿ ತಮ್ಮೊಂದಿಗೆ ಸಹೋದರನಂತೆ ನಿಂತು ನಿರಂತರ ಸಹಕಾರ ನೀಡಿದ್ದಾರೆ ಎಂದು ಪ್ರಶಂಸಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸತೀಶ್ ಪೂಜಾರಿ, ದೈವಸ್ಥಾನದ ಅಭಿವೃದ್ಧಿಗೆ ದೇಣಿಗೆ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಬ್ರಹ್ಮಕಲಶ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಹಲವರು ವೈಯಕ್ತಿಕವಾಗಿ ಖರ್ಚು ಹೊತ್ತು ಸಹಕರಿಸಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿದ್ದರು. ಶಿಕ್ಷಣ, ಮಾಧ್ಯಮ, ಉದ್ಯಮ ಮತ್ತು ಸಮಾಜಸೇವಾ ಕ್ಷೇತ್ರದ ಪ್ರತಿನಿಧಿಗಳು ಉಪಸ್ಥಿತರಿದ್ದು, ಸತೀಶ್ ಪೂಜಾರಿಯವರ ಸೇವೆಯನ್ನು ಕೊಂಡಾಡಿದರು.
ಕಾರ್ಯಕ್ರಮವನ್ನು ಶಿಕ್ಷಕ ಪ್ರಶಾಂತ್ ಶೆಟ್ಟಿ ನಿರೂಪಿಸಿದ್ದು, ಲಕ್ಷ್ಮೀಶ್ ಭಟ್ ವಂದಿಸಿದರು.
ಸತೀಶ್ ಪೂಜಾರಿ ಕೀಳಂಜೆ ಅವರು ಹಲವಾರು ದೇವಸ್ಥಾನಗಳು ಮತ್ತು ದೈವಸ್ಥಾನಗಳ ಜೀರ್ಣೋದ್ಧಾರ ಸಮಿತಿಗಳಲ್ಲಿ ಪ್ರಮುಖ ಹುದ್ದೆಗಳನ್ನು ವಹಿಸಿಕೊಂಡು, ಹಾವಂಜೆ, ಉಪೂರು, ಕುಕ್ಕೆಹಳ್ಳಿ ಭಾಗಗಳಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ದೈವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸ್ಥಳೀಯರನ್ನು ಪ್ರೇರೇಪಿಸುವುದು ಮತ್ತು ದೇಣಿಗೆ ಸಂಗ್ರಹಿಸುವುದರಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ.

