ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಅಕ್ಕಿಯ ಜೊತೆಗೆ ರಾಗಿ ಹಾಗೂ ಜೋಳ ವಿತರಿಸಲು ಆಹಾರ ಇಲಾಖೆ ತೀರ್ಮಾನಿಸಿದೆ.
ಪ್ರಸ್ತುತ ಪ್ರತಿ ವ್ಯಕ್ತಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳಡಿ ಒಟ್ಟು 10 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಇದೀಗ ಹೆಚ್ಚುವರಿಯಾಗಿ ಪ್ರತಿ ಫಲಾನುಭವಿಗೆ 2 ಕೆಜಿ ರಾಗಿ ಅಥವಾ ಜೋಳ ನೀಡಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿ 1.14 ಕೋಟಿಗೂ ಹೆಚ್ಚು ಬಿಪಿಎಲ್ ಕಾರ್ಡ್ಗಳಿದ್ದು, ಸುಮಾರು 4.01 ಕೋಟಿಗೂ ಹೆಚ್ಚು ಸದಸ್ಯರಿದ್ದಾರೆ. ಇವರಿಗೆ ಪ್ರತಿ ತಿಂಗಳು ಸುಮಾರು 57 ಸಾವಿರ ಮೆಟ್ರಿಕ್ ಟನ್ ರಾಗಿ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.
Karnataka Food and Civil Supplies Corporation ಬೆಂಬಲ ಬೆಲೆ ಯೋಜನೆಯಡಿ ಈಗಾಗಲೇ 5.2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿಸಿ ದಾಸ್ತಾನು ಮಾಡಿದೆ. ಮೇ 15ರವರೆಗೆ ನೋಂದಾಯಿತ ರೈತರಿಗೆ ರಾಗಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
ಹಳೆ ಮೈಸೂರು ಭಾಗದ ಪಡಿತರ ಚೀಟಿದಾರರಿಗೆ 2 ಕೆಜಿ ರಾಗಿ ಹಾಗೂ ಕಲ್ಯಾಣ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಭಾಗದವರಿಗೆ 2 ಕೆಜಿ ಜೋಳ ವಿತರಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

