ಮಡಿಕೇರಿ : ಬಸ್ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತಕ್ಕೀಡಾಗಿ ಚಾಲಕ ಮೃತಪಟ್ಟ ದಾರುಣ ಘಟನೆ ಮಡಿಕೇರಿ ಸಮೀಪದ ತಾಳತ್ತಮನೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.
ಬೆಂಗಳೂರು ಮೂಲದ ಶಿವಕುಮಾರ್ (50) ಮೃತ ಚಾಲಕರಾಗಿದ್ದಾರೆ.

ಶಿವಕುಮಾರ್ ಚಾಲನೆ ಮಾಡುತ್ತಿದ್ದ ಬಸ್ ಇಂದು ಮುಂಜಾನೆ ಸುಮಾರು 4:45ರ ವೇಳೆಗೆ ಮಡಿಕೇರಿಯಿಂದ Sulya ಕಡೆಗೆ ಪ್ರಯಾಣ ಬೆಳೆಸಿತ್ತು. ರಾಷ್ಟ್ರೀಯ ಹೆದ್ದಾರಿಯ ತಾಳತ್ತಮನೆ ಬಳಿ ತಲುಪಿದಾಗ ಅವರಿಗೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ.
ಇದರಿಂದ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ದರೆಗೆ ಢಿಕ್ಕಿಯಾಗಿ ವಾಲಿ ನಿಂತಿದೆ. ಬಸ್ಸಿನಲ್ಲಿದ್ದ ಸುಮಾರು 20 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಹೃದಯಾಘಾತವಾದ ಕೆಲವೇ ಕ್ಷಣಗಳಲ್ಲಿ ಶಿವಕುಮಾರ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

