ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯ ಸಂತೆಕಟ್ಟೆ ಮಾರ್ಕೆಟ್ ಹಿಂಭಾಗದಲ್ಲಿದ್ದ ಅಪಾಯಕಾರಿ ಮೆಸ್ಕಾಂ ವಿದ್ಯುತ್ ಕಂಬವನ್ನು ತೆರವುಗೊಳಿಸಿ ಸಾರ್ವಜನಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆಯತ್ತ ವಾಲಿಕೊಂಡಿದ್ದ ಈ ವಿದ್ಯುತ್ ಕಂಬ ಯಾವುದೇ ಕ್ಷಣದಲ್ಲಿ ಬೀಳುವ ಭೀತಿ ಉಂಟುಮಾಡಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಲ್ಲಿ ಆತಂಕ ಸೃಷ್ಟಿಸಿತ್ತು.

ಈ ಸಮಸ್ಯೆಯನ್ನು ಮನಗಂಡ ಸಾಮಾಜಿಕ ಹೋರಾಟಗಾರ ಸತೀಶ್ ಪೂಜಾರಿ ಕೀಳಂಜೆ ಅವರು ಸಂಬಂಧಪಟ್ಟ ಮೆಸ್ಕಾಂ ಅಧಿಕಾರಿಗಳು ಹಾಗೂ ಸಂತೆಕಟ್ಟೆ-ಕಲ್ಯಾಣಪುರ ವಿಭಾಗದ ಅಧಿಕಾರಿಗಳ ಗಮನಕ್ಕೆ ವಿಷಯವನ್ನು ತಂದು, ವಿದ್ಯುತ್ ಕಂಬ ಮತ್ತು ತಂತಿಗಳಿಂದ ಉಂಟಾಗುತ್ತಿದ್ದ ಅಪಾಯದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಎರಡು-ಮೂರು ದಿನಗಳ ಕಾಲ ನಿರಂತರವಾಗಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಸಮಸ್ಯೆ ಪರಿಹಾರಕ್ಕೆ ಹೋರಾಟ ನಡೆಸಿದ ಪರಿಣಾಮ, ಮೆಸ್ಕಾಂ ಇಲಾಖೆ ಅಪಾಯಕಾರಿ ವಿದ್ಯುತ್ ಕಂಬವನ್ನು ತೆರವುಗೊಳಿಸಿ ಸಮಸ್ಯೆಯನ್ನು ಸರಿಪಡಿಸಿದೆ. ಇದರಿಂದ ಇದೀಗ ಸಾರ್ವಜನಿಕರು ಹಾಗೂ ವಾಹನ ಸವಾರರು ಯಾವುದೇ ಭಯವಿಲ್ಲದೆ ಈ ರಸ್ತೆಯಲ್ಲಿ ಸಂಚರಿಸುವಂತಾಗಿದೆ.

ಸತೀಶ್ ಪೂಜಾರಿ ಕೀಳಂಜೆ ಅವರ ಸಾಮಾಜಿಕ ಕಳಕಳಿ ಮತ್ತು ಜನಪರ ಹೋರಾಟವನ್ನು ಸ್ಥಳೀಯ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ತ್ವರಿತ ಕ್ರಮ ಕೈಗೊಂಡ ಮೆಸ್ಕಾಂ ಅಧಿಕಾರಿಗಳಿಗೂ ಅಭಿನಂದನೆ ಸಲ್ಲಿಸಲಾಗಿದೆ.
ರಾಮ ಪೂಜಾರಿ ಸಂತೆಕಟ್ಟೆ, ಅರುಣ್ ಪೂಜಾರಿ ಸಂತೆಕಟ್ಟೆ ಮಾಯಾಡಿ, ಕಿಶೋರ್ ಅಮುಜೆ, ಉಮೇಶ್ ಶೆಟ್ಟಿ ನಡುಮನೆ (ಜಿಲ್ಲಾ ತುಳುನಾಡ ರಕ್ಷಣೆ ಉಪಾಧ್ಯಕ್ಷರು) ಹಾಗೂ ಪುತ್ತೂರು ಸಂತೆಕಟ್ಟೆ ವಾರ್ಡಿನ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.

