ಉಡುಪಿ: ಹೊಸ ಮುಖ್ಯಮಂತ್ರಿ ಪದಗ್ರಹಣ ಮತ್ತು ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಮಂಜುನಾಥ ಭಂಡಾರಿ ಅವರಿಗೆ ಅವಕಾಶ ನೀಡಬೇಕೆಂದು ಕುಂದಾಪುರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಛಿತಾರ್ಥ್ ಶೆಟ್ಟಿ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.
ಮಂಜುನಾಥ್ ಭಂಡಾರಿ ಅವರು 40 ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದಾರೆ. ರಾಜ್ಯದ ಎಲ್ಲ ಮಂತ್ರಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಜನರ ಸಮಸ್ಯೆಗೆ ಶ್ರೀ ಸ್ಪಂದಿಸುತ್ತಾರೆ. ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳಿಯ ಸಂಸ್ಥೆಗಳ ಪ್ರತಿನಿಧಿಯಾಗಿ ಪ್ರತಿಯೊಬ್ಬ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಇವರು ಜಿಲ್ಲಾ ಉಸ್ತುವಾರಿ ಸಚಿವರಾದರೆ ಈಗಾಗಲೇ ಐದು ಕ್ಷೇತ್ರಗಳಲ್ಲಿ ಸೋತಿರುವ ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗುತ್ತದೆ. ಜಿಲ್ಲೆಯ ವಿಧಾನ ಪರಿಷತ್ ಸದಸ್ಯರು ಸಚಿವರಾದರೆ ಸ್ಥಳಿಯವಾಗಿ ಸಾರ್ವಜನಿಕರಿಗೂ ಸಹಾಯವಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯು.ಟಿ ಖಾದರ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದ್ದು, ಉಡುಪಿ ಜಿಲ್ಲೆಯಿಂದ ಮಂಜುನಾಥ್ ಭಂಡಾರಿ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಬೇಕಾಗಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ , ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಸಲಾಂ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಟರಾಜ್ ಹೊಳ್ಳ, ಕುಂದಾಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಜಿತ್ ಪೂಜಾರಿ ಹೇರಿಕುದ್ರು, ಅಲ್ಪಸಂಖ್ಯಾತರ ಘಟಕ ಕುಂದಾಪುರ ಬ್ಲಾಕ್ ಅಧ್ಯಕ್ಷ ಮುನಾಫ್ ಕೋಡಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶೆಟ್ಟಿ ಮೊದಲಾದವರಿದ್ದರು.

