ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯ ಗಾಳಿ ಬೀಸುತ್ತಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ
ಮುಂದಿನ ಸೋಮವಾರ ಸಂಜೆ ಡಿಕೆ ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಅದಕ್ಕೂ ಮುನ್ನ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ ನಡೆಯಲಿದ್ದು, ಅಲ್ಲಿ ಡಿಕೆಶಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.
ಮೊದಲ ಹಂತದಲ್ಲೇ 10ಕ್ಕೂ ಹೆಚ್ಚು ಸಚಿವರು?
ಹೊಸ ಸರ್ಕಾರದ ಮೊದಲ ಹಂತದ ಸಚಿವ ಸಂಪುಟವೂ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಆರಂಭದಲ್ಲಿ ಕೇವಲ 7 ಮಂದಿ ಮಾತ್ರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದ್ದರೂ, ಇದೀಗ 10 ರಿಂದ 12 ಹಿರಿಯ ನಾಯಕರು ಮೊದಲ ಹಂತದಲ್ಲೇ ಸಚಿವರಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಸಚಿವ ಸ್ಥಾನಕ್ಕೆ ಫಿಕ್ಸ್ ಎನ್ನಲಾಗುತ್ತಿರುವ ನಾಯಕರು ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಈ ಪ್ರಮುಖ ನಾಯಕರ ಹೆಸರುಗಳು ಕೇಳಿಬರುತ್ತಿವೆ:
ಡಾ. ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್,ಕೆ.ಜೆ. ಜಾರ್ಜ್,ಯು.ಟಿ. ಖಾದರ್ ,ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ ,ಈಶ್ವರ್ ಖಂಡ್ರೆ, ಎಚ್.ಕೆ. ಪಾಟೀಲ್ರಾ, ಮಲಿಂಗಾರೆಡ್ಡಿ ,ಕೆ.ಎಚ್. ಮುನಿಯಪ್ಪ ,ಮಂಕಾಳ್ ವೈದ್ಯ.
ಸ್ಪೀಕರ್ ಸ್ಥಾನಕ್ಕೂ ಭಾರೀ ಪೈಪೋಟಿ
ಹಾಲಿ ಸ್ಪೀಕರ್ ಯು.ಟಿ.ಖಾದರ್ ಅವರು ಈ ಬಾರಿ ಸಚಿವ ಸಂಪುಟ ಸೇರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ತೆರವಾಗಲಿರುವ ಸ್ಪೀಕರ್ ಸ್ಥಾನಕ್ಕೆ ದಿನೇಶ್ ಗುಂಡುರಾವ್, ಹೆಚ್.ಕೆ.ಪಾಟೀಲ್ ಹಾಗೂ ಜಿ.ಪರಮೇಶ್ವರ ಅವರ ಹೆಸರುಗಳು ಕೇಳಿಬರುತ್ತಿವೆ.
ಡಿ.ಕೆ.ಶಿವಕುಮಾರ್ ಅಭಿಮಾನಿಗಳು ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದು, “ಡಿಕೆಶಿ ಸಿಎಂ” ಎಂಬ ಘೋಷಣೆಗಳು ಈಗಾಗಲೇ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿವೆ. ಸೋಮವಾರ ಸಂಜೆಯೊಳಗೆ ಎಲ್ಲಾ ರಾಜಕೀಯ ಗೊಂದಲಗಳಿಗೆ ತೆರೆ ಬೀಳುವ ನಿರೀಕ್ಷೆಯಿದೆ.

