ಉಚಿತ ಬಸ್‌ಪಾಸ್‌ಗೆ ವಿದ್ಯಾರ್ಥಿಗಳು ಹೇಗೇ ಅರ್ಜಿ ಸಲ್ಲಿಸಬಹುದು : ಇಲ್ಲಿದೆ ಸಂಪೂರ್ಣ ಮಾಹಿತಿ..!

0
232

ಮಂಗಳೂರು : ರಾಜ್ಯದ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಭಾರೀ ಸಂತಸದ ಸುದ್ದಿ ದೊರೆತಿದೆ. ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿದ್ದು, ಈ ಸಂಬಂಧ ಸಾರಿಗೆ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಜೂನ್ 3, 2026ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಶಾಲಾ ಮತ್ತು ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿತ್ತು. ಇದರ ಅನ್ವಯ ಸಾರಿಗೆ ಇಲಾಖೆ ಗುರುವಾರ ಆದೇಶ ಹೊರಡಿಸಿ ಯೋಜನೆಗೆ ತಾತ್ವಿಕ ಅನುಮೋದನೆ ನೀಡಿದೆ.

ಈ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ವ್ಯಾಪ್ತಿಯ ಬಸ್‌ಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಲಭ್ಯವಾಗಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಸರ್ಕಾರದ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್, ಸೈಬರ್ ಸೆಂಟರ್ ಅಥವಾ ಬೆಂಗಳೂರು ಒನ್ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಬಹುದು.

ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸುವವರು ಅರ್ಜಿ ನಮೂನೆಗೆ 10 ರೂ. ಹಾಗೂ ಆನ್‌ಲೈನ್ ಸೇವೆಗೆ 100 ರೂ. ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ.

ಅಗತ್ಯ ದಾಖಲೆಗಳು

ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸುವಾಗ ಈ ದಾಖಲೆಗಳು ಕಡ್ಡಾಯವಾಗಿವೆ:

• ವಿದ್ಯಾರ್ಥಿಯ ಆಧಾರ್ ಕಾರ್ಡ್
• ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರವೇಶಾತಿ ರಶೀದಿ (Admission Receipt)
• ಎರಡು ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳು

ಪಾಸ್ ಪಡೆಯುವ ವಿಧಾನ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಅದರ ಪ್ರತಿಯನ್ನು ತೆಗೆದುಕೊಂಡು ವಿದ್ಯಾಸಂಸ್ಥೆಯ ಮುಖ್ಯಸ್ಥರಿಂದ ಸಹಿ ಹಾಗೂ ಸಂಸ್ಥೆಯ ಸೀಲು ಪಡೆಯಬೇಕು. ಬಳಿಕ ಬಿಎಂಟಿಸಿ ಅಥವಾ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಅರ್ಜಿಯನ್ನು ಪರಿಶೀಲಿಸಿ ಅನುಮೋದನೆ ನೀಡುತ್ತಾರೆ.

ಅರ್ಜಿ ಮಂಜೂರಾದ ಬಳಿಕ ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಸಂದೇಶ ಕಳುಹಿಸಲಾಗುತ್ತದೆ.

ಪಾಸ್ ಎಲ್ಲಿ ಸಿಗಲಿದೆ?

ಬೆಂಗಳೂರು ವಿದ್ಯಾರ್ಥಿಗಳು ಮೆಜೆಸ್ಟಿಕ್, ಕೆಂಗೇರಿ, ಶಾಂತಿನಗರ, ಎಲೆಕ್ಟ್ರಾನಿಕ್ ಸಿಟಿ, ಹೊಸಕೋಟೆ ಹಾಗೂ ಆನೇಕಲ್ ಟಿಟಿಎಂಸಿ ಕೇಂದ್ರಗಳಲ್ಲಿ ಪಾಸ್ ಪಡೆದುಕೊಳ್ಳಬಹುದು.

ರಾಜ್ಯದ ಇತರೆ ಜಿಲ್ಲೆಗಳ ವಿದ್ಯಾರ್ಥಿಗಳಿಗಾಗಿ ಕೆಎಸ್‌ಆರ್‌ಟಿಸಿ ವ್ಯಾಪ್ತಿಯಲ್ಲಿ 123 ಪಾಸ್ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದ್ದು, ಸಂಬಂಧಿತ ಕೌಂಟರ್‌ಗಳಿಂದ ಉಚಿತ ಬಸ್ ಪಾಸ್ ಪಡೆಯಬಹುದಾಗಿದೆ.

ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ವಿವರವಾದ ಮಾರ್ಗಸೂಚಿಗಳು ಹಾಗೂ ಷರತ್ತುಗಳನ್ನು ಸರ್ಕಾರ ಪ್ರತ್ಯೇಕವಾಗಿ ಪ್ರಕಟಿಸಲಿದೆ. ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಈ ಯೋಜನೆ ಆರ್ಥಿಕ ನೆರವು ನೀಡುವ ಜೊತೆಗೆ ಶಿಕ್ಷಣದ ಪ್ರವೇಶವನ್ನು ಮತ್ತಷ್ಟು ಸುಲಭಗೊಳಿಸುವ ನಿರೀಕ್ಷೆಯಿದೆ.

LEAVE A REPLY

Please enter your comment!
Please enter your name here