ಮೂಡುಬಿದಿರೆ : ಬಡವರ ಬದುಕು ಹಸನಾಗಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಸರಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿತ್ತು. ವಿಶೇಷವೆಂದರೆ ಈ ಯೋಜನೆಯನ್ನು ಹೆಚ್ಚು ಟೀಕಿಸುತ್ತಾ ಬಂದಿರುವವರು ದಕ್ಷಿಣ ಕನ್ನಡ ಜಿಲ್ಲೆಯವರೆ ಯೋಜನೆಯ ಅತಿ ಹೆಚ್ಚು ಫಲಾನುಭವಿಗಳು ಆಗಿದ್ದಾರೆ. ಜಿಲ್ಲೆಯಲ್ಲಿ ಶೇ.9ಕ್ಕೂ ಅಧಿಕ ಫಲಾನುಭವಿಗಳಿಗೆ ಯೋಜನೆ ತಲುಪಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು.

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಮೂಡುಬಿದಿರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಂಗಳೂರು, ಆಳ್ವಾ ಆಯುರ್ವೇದಿಕ್ ಕಾಲೇಜು, ಗ್ರಾಮ ಸ್ವರಾಜ್ಯ ಪ್ರತಿಷ್ಠಾನ ದ.ಕ ಮತ್ತು ಬಿಲ್ಲವ ಸಂಘ ಇರುವೈಲು ಇವುಗಳ ಸಹಯೋಗದೊಂದಿಗೆ ಕರ್ನಾಟಕ ಸರಕಾರದ ಮೂರನೇ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಇಲ್ಲಿನ ಸಮಾಜ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಗೃಹಲಕ್ಷ್ಮಿ ಕೋಟಿ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮುಖಂಡ ಅಭಯಚಂದ್ರ ಜೈನ್ ಮಾತನಾಡಿ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿ ನೇಮಕವಾಗದೆ ಬಡವರಿಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗಿದೆ. ನೂತನ ಆರೋಗ್ಯ ಸಚಿವ ಯು.ಟಿ ಖಾದರ್ ಜತೆ ಮಾತನಾಡಿ ಎರಡು ತಿಂಗಳೊಳಗೆ ವೈದ್ಯಾಧಿಕಾರಿಯನ್ನು ನೇಮಿಸಲಾಗುವದು ಎಂದರು.
ಕೆಎಂಎಫ್ ನಿರ್ದೇಶಕ ಕೆ.ಪಿ ಸುಚರಿತ ಶೆಟ್ಟಿ, ಗ್ರಾಮ ಸ್ವರಾಜ್ಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಸಮಾಜ ಮಂದಿರ ಸಭಾದ ಕಾರ್ಯದರ್ಶಿ ಸುರೇಶ್ ಪ್ರಭು, ಆಳ್ವಾಸ್ ಆಯುರ್ವೇದ ವೈದ್ಯಕೀಯ ವಿಭಾಗದ ಡಾ.ಕೇಜಿಯಾ ಉಪಸ್ಥಿತರಿದ್ದರು. ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನ್ನಾಡಿದರು. ಜೈಸನ್ ಪಿರೇರಾ ನಿರೂಪಿಸಿದರು. ಕ್ಲಾರಿಯೊ ಧನ್ಯವಾದ ಸಲ್ಲಿಸಿದರು.

