ಉಡುಪಿ: ಕಾರ್ಕಳದ ಸಂಗೀತ ವಿದುಷಿ ಮಹಾಲಕ್ಷ್ಮೀ ಶೆಣೈ ಅವರು ಕೇಂದ್ರ ಸಂಗೀತ ನಾಟಕ ಅಕಾಡೆಮಿಯ 2024-25ನೇ ಸಾಲಿನ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಕರಾವಳಿ ಕರ್ನಾಟಕದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಅಕಾಡೆಮಿ ಪ್ರಶಸ್ತಿ ಗಳಿಸಿದ ಮೊದಲ ಪ್ರತಿಭೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಅವರ ಸಾಧನೆಗಾಗಿ ಈ ಪ್ರಶಸ್ತಿ ಲಭಿಸಿದೆ. ಇವರು ಸಂಗೀತ ಲೋಕದ ದಿಗ್ಗಜ ಪಂಡಿತ್ ವಿಶ್ವಮೋಹನ್ ಭಟ್ ಶಿಷ್ಯೆಯಾಗಿದ್ದು, ಕರ್ನಾಟಕ ಶಾಸ್ತ್ರೀಯ ಸಂಗೀತದ ಜತೆಗೆ ಭರತನಾಟ್ಯದಲ್ಲಿ ಪ್ರಾವಿಣ್ಯತೆ ಪಡೆದಿದ್ದಾರೆ.
ಆಕಾಶವಾಣಿ ಎ ಗ್ರೇಡ್ ಕಲಾವಿದೆಯಾಗಿದ್ದಾರೆ. ಎಂಎಸ್ಡಬ್ಲ್ಯು, ಎಂಎಸ್ ಪದವಿಧರೆಯಾಗಿರುವ ಇವರು ಉದಯಪುರ ಎಂಎಲ್ಸಿ ವಿಶ್ವವಿದ್ಯಾಲಯದಿಂದ ಚಿನ್ನದ ಪದಕದೊಂದಿಗೆ ಸಂಗೀತದಲ್ಲಿ ಎಂಎ ಪದವಿ ಗಳಿಸಿದ್ದಾರೆ. ಉಡುಪಿ ಜಿಲ್ಲಾ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕೊಂಕಣಿ ಅಕಾಡೆಮಿಯ ಕೊಂಕಣಿ ನಕ್ಷತ್ರ ಯುವಸಾಧಕಿ ಪ್ರಶಸ್ತಿ ಸಹಿತ ಅನೇಕ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

