ಮೂಡುಬಿದಿರೆ : ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆ ಜೂನ್ 21ರಂದು ಮೂಡುಬಿದಿರೆ ಸಮಾಜ ಮಂದಿರದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ.
ಸಭೆಯಲ್ಲಿ 2026-27ನೇ ಸಾಲಿನ ಕಂಬಳ ಸ್ಪರ್ಧೆಗಳ ದಿನಾಂಕ ನಿಗದಿ, ಆಯೋಜನಾ ಕ್ರಮಗಳು ಹಾಗೂ ನಿಯಮ ಪಾಲನೆ ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಕಂಬಳ ಆಯೋಜನೆಗೆ ಸಂಬಂಧಿಸಿದ ಸರ್ಕಾರದ ಮಾರ್ಗಸೂಚಿಗಳಂತೆ ಅನುದಾನ ಪಡೆಯಲು ರಾಜ್ಯ ಕಂಬಳ ಅಸೋಸಿಯೇಷನ್ಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಗುತ್ತದೆ. ಜೊತೆಗೆ ತೀರ್ಪುಗಾರರು ಹಾಗೂ ಕೋಣಗಳನ್ನು ಓಡಿಸುವವರಿಗೆ ನಿರಂತರ ಕಾರ್ಯಾಗಾರಗಳನ್ನು ನಡೆಸುವ ಕುರಿತು ಸಹ ಚರ್ಚೆ ನಡೆಯಲಿದೆ.
ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್ ಹಾಗೂ ಎರಡು ಭಾವಚಿತ್ರಗಳನ್ನು ಕಡ್ಡಾಯವಾಗಿ ಲಗತ್ತಿಸುವ ನಿಯಮಗಳ ಬಗ್ಗೆ ಕೂಡ ಸಭೆಯಲ್ಲಿ ವಿವರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ನೂತನ ಪದಾಧಿಕಾರಿಗಳ ಆಯ್ಕೆ ಕಂಬಳ ಸಮಿತಿಯ ಸದಸ್ಯತ್ವ ಹೊಂದಿದವರಿಂದ ಮಾತ್ರ ನಡೆಯಲಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಕಂಬಳ ಸಮಿತಿ ಕಾಸರಗೋಡು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿದ್ದು, ಜಿಲ್ಲಾ ಮಟ್ಟದ ಕಂಬಳಗಳ ಸುಸೂತ್ರ ಆಯೋಜನೆಗೆ ಈ ಸಭೆ ಮಹತ್ವದ್ದಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚೂರು ತಿಳಿಸಿದ್ದಾರೆ.

