ಉಡುಪಿ : ತಮಿಳುನಾಡು ಮುಖ್ಯಮಂತ್ರಿ Vijay ಅವರು ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಈ ವೇಳೆ ದೇವಿಗೆ ಭಕ್ತಿಪೂರ್ವಕವಾಗಿ ಬೆಳ್ಳಿಯ ಖಡ್ಗವನ್ನು ಕಾಣಿಕೆಯಾಗಿ ಸಮರ್ಪಿಸಿದರು.
ದೇವಾಲಯಕ್ಕೆ ಆಗಮಿಸಿದ ಮುಖ್ಯಮಂತ್ರಿ ವಿಜಯ್ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. ಬಳಿಕ ದೇವಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ಸುಮಾರು 30 ನಿಮಿಷಗಳ ಕಾಲ ದೇವಸ್ಥಾನದಲ್ಲಿ ಕಾಲ ಕಳೆದರು.
ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಸಂರಕ್ಷಿಸಲಾಗಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ M. G. Ramachandran ಅವರು ಸಮರ್ಪಿಸಿದ್ದ ಐತಿಹಾಸಿಕ ಚಿನ್ನದ ಖಡ್ಗವನ್ನು ಕುತೂಹಲದಿಂದ ವೀಕ್ಷಿಸಿದರು. ಅದರ ಹಿನ್ನೆಲೆ ಹಾಗೂ ಮಹತ್ವದ ಕುರಿತು ದೇವಸ್ಥಾನದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ತಮಿಳುನಾಡು ಮುಖ್ಯಮಂತ್ರಿ ಭೇಟಿ ವಿಚಾರ ತಿಳಿಯುತ್ತಿದ್ದಂತೆ ದೇವಸ್ಥಾನದ ಹೊರಾಂಗಣದಲ್ಲಿ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಭದ್ರತಾ ವ್ಯವಸ್ಥೆಯ ನಡುವೆಯೇ ವಿಜಯ್ ದೇವರ ದರ್ಶನ ಪಡೆದು ಮರಳಿದರು.

