
ಕಾರ್ಕಳ: ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಜೂನ್ 14ರಂದು ಡಾ. ಟಿ.ಎಮ್.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ವಿನಾಯಕ ಫ್ರೆಂಡ್ಸ್ ಕಾರ್ಕಳ ಹಾಗೂ ಶ್ರೀ ರವಿಶಂಕರ್ ಗುರೂಜಿ ಶಾಲೆಯ ಸಹಯೋಗದಲ್ಲಿ ನಾಲ್ಕನೇ ವರ್ಷದ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.
ಶಿಬಿರದಲ್ಲಿ 100ಕ್ಕೂ ಹೆಚ್ಚಿನ ರಕ್ತದಾನಿಗಳು ಅತ್ಯುತ್ಸಾಹದಿಂದ ಭಾಗವಹಿಸಿದ್ದು, ಒಟ್ಟು 80 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಅಗತ್ಯವಿರುವ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯಿತು.
ಕಾರ್ಯಕ್ರಮದಲ್ಲಿ ಡಾ. ಟಿ.ಎಮ್.ಎ. ಪೈ ರೋಟರಿ ಆಸ್ಪತ್ರೆಯ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು, ವಿನಾಯಕ ಫ್ರೆಂಡ್ಸ್ ಕಾರ್ಕಳದ ಸದಸ್ಯರು, ಶ್ರೀ ರವಿಶಂಕರ್ ಗುರೂಜಿ ಶಾಲೆಯ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ಶಿಬಿರದ ಯಶಸ್ಸಿಗೆ ಸಹಕರಿಸಿದರು.
ರಕ್ತದಾನಿಗಳ ಸೇವಾ ಮನೋಭಾವವನ್ನು ಸಂಘಟಕರು ಶ್ಲಾಘಿಸಿ, ಸಮಾಜದ ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಮಹತ್ವದ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರು.

