ಮೂಡುಬಿದಿರೆ : ಶ್ರೀ ಮಹಾವೀರ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಓರಿಯಂಟೇಶನ್ ಕಾರ್ಯಕ್ರಮದ ಅಂಗವಾಗಿ ಖ್ಯಾತ ಹರಿಕಥಾ ವಿದ್ವಾಂಸರು, ಶಿಕ್ಷಣತಜ್ಞರು ಹಾಗೂ ವಾಗ್ಮಿಗಳಾದ ಡಾ. ಎಸ್.ಪಿ. ಗುರುದಾಸ್ ಅವರು “ಸಾರ್ವತ್ರಿಕ ಮಾನವ ಮೌಲ್ಯಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ತಮ್ಮ ಉಪನ್ಯಾಸದಲ್ಲಿ ಮಾತನಾಡಿದ ಅವರು, ಜಗತ್ತಿನ ಪ್ರತಿಯೊಬ್ಬ ವ್ಯಕ್ತಿಯೂ ಬಯಸುವುದು ನೆಮ್ಮದಿ ಮತ್ತು ಸಂತೋಷವಾಗಿದ್ದು, ಅದು ಮಾನವನ ಮೂಲಭೂತ ಸ್ವಭಾವವಾಗಿದೆ ಎಂದು ತಿಳಿಸಿದರು. ಜೀವನದಲ್ಲಿ ನಿಜವಾದ ಸಂತೃಪ್ತಿ ದೊರೆತಾಗ ಮಾತ್ರ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಶಿಕ್ಷಣವು ಕೇವಲ ಪದವಿ ಪಡೆಯುವ ಸಾಧನವಾಗದೆ, ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಹಾಗೂ ಸರಿಯಾದ ಮಾನವೀಯ ನಡವಳಿಕೆಯನ್ನು ಬೆಳೆಸುವ ಪ್ರಕ್ರಿಯೆಯಾಗಿರಬೇಕು ಎಂದು ಅವರು ಅಭಿಪ್ರಾಯಪಟ್ಟರು. ಸಮಾಜದಲ್ಲಿ ಉತ್ತಮ ಮೌಲ್ಯಗಳು, ಚಾರಿತ್ರ್ಯ ಹಾಗೂ ನೈತಿಕತೆಯನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಗಳು ಮತ್ತು ಆದರ್ಶ ಸಮಾಜ ನಿರ್ಮಾಣ ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ವಹಿಸಿದ್ದರು. ಕಾರ್ಯಕ್ರಮದ ಸಂಯೋಜನೆಯನ್ನು ದೀಕ್ಷಾ ನಿರ್ವಹಿಸಿದರು. ಶ್ರುತಿ ಎಸ್. ಡಾಂಗೆ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಪ್ರೊ. ಹರೀಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉತ್ಸಾಹದಿಂದ ಭಾಗವಹಿಸಿದರು.

