ಮಂಗಳೂರು : ರಾಜ್ಯದಲ್ಲಿ ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಭರದ ಸಿದ್ಧತೆ ಆರಂಭಿಸಿದ್ದು, ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ (ಡಿಸಿ) ಮಹತ್ವದ ನಿರ್ದೇಶನಗಳನ್ನು ನೀಡಿದೆ. ಹಳ್ಳಿಗಳ ಆಡಳಿತದ ಚುಕ್ಕಾಣಿ ಯಾರ ಕೈ ಸೇರಲಿದೆ ಎಂಬ ಕುತೂಹಲದ ನಡುವೆ ಚುನಾವಣಾ ಪೂರ್ವ ಸಿದ್ಧತೆಗಳಿಗೆ ವೇಗ ನೀಡಲಾಗಿದೆ.
ಚುನಾವಣೆಯ ಮೊದಲ ಹಂತವಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯನ್ವಯ ವಾರ್ಡ್ಗಳ ವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿ ಅದರ ಪ್ರತಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ನಿರ್ದೇಶನ ನೀಡಲಾಗಿದೆ.
ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿಗೆ ಚುನಾವಣಾಧಿಕಾರಿ (Returning Officer) ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲು ಆದೇಶಿಸಲಾಗಿದೆ. ಗ್ರೂಪ್-ಬಿ ಅಧಿಕಾರಿಗಳು ಹಾಗೂ ಶಿರಸ್ತೇದಾರ್ ಹಂತದ ಅಧಿಕಾರಿಗಳಿಗೆ ಈ ಜವಾಬ್ದಾರಿ ವಹಿಸಲಾಗುತ್ತದೆ.
ಇದರೊಂದಿಗೆ, ಯಾವುದೇ ಅಧಿಕಾರಿಯೂ ತನ್ನ ಸ್ವಂತ ಊರಿನಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಬಾರದು ಎಂಬ ಕಟ್ಟುನಿಟ್ಟಿನ ನಿಯಮವನ್ನು ಆಯೋಗ ಜಾರಿಗೊಳಿಸಿದೆ. ಸ್ಥಳೀಯ ಪ್ರಭಾವ, ಸ್ವಜನಪಕ್ಷಪಾತ ಹಾಗೂ ರಾಜಕೀಯ ಒತ್ತಡಗಳನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ನೇಮಕಾತಿ ಆದೇಶ ಹೊರಬಿದ್ದ ತಕ್ಷಣ ತಾಲೂಕುವಾರು ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಅಕ್ಟೋಬರ್ಗೂ ಮುನ್ನ ಚುನಾವಣೆ ಸಾಧ್ಯತೆ ಕಡಿಮೆ
ಸಿದ್ಧತೆಗಳು ಆರಂಭವಾಗಿದ್ದರೂ ಗ್ರಾಮ ಪಂಚಾಯಿತಿ ಚುನಾವಣೆ ತಕ್ಷಣ ನಡೆಯುವ ಸಾಧ್ಯತೆ ಇಲ್ಲ. ಸದ್ಯ ಆಡಳಿತ ಯಂತ್ರವು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, 2025ರ ನವೀಕೃತ ಮತದಾರರ ಪಟ್ಟಿಯನ್ನು ಆಧರಿಸಿ ಚುನಾವಣೆ ನಡೆಸಬೇಕಿರುವುದರಿಂದ ಅಕ್ಟೋಬರ್ಗೂ ಮುನ್ನ ಚುನಾವಣೆ ನಡೆಯುವ ಸಾಧ್ಯತೆ ತೀರಾ ಕಡಿಮೆ ಎಂದು ತಿಳಿದುಬಂದಿದೆ.
ಈ ಕುರಿತು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಪ್ರತಿಕ್ರಿಯಿಸಿ, “ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವುದು ಆಯೋಗದ ಪ್ರಮುಖ ಹೊಣೆಗಾರಿಕೆ. ಯಾವುದೇ ಗೊಂದಲಗಳಿಲ್ಲದಂತೆ ಅಗತ್ಯ ಎಲ್ಲಾ ಪೂರ್ವಸಿದ್ಧತೆಗಳನ್ನು ಈಗಾಗಲೇ ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.
ಒಟ್ಟಾರೆ, ಚುನಾವಣೆ ಇನ್ನೂ ಕೆಲವು ತಿಂಗಳು ದೂರವಿದ್ದರೂ, ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆಗಳು ನಿಧಾನವಾಗಿ ಗರಿಗೆದರಲಾರಂಭಿಸಿದ್ದು, ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

