ಮಂಗಳೂರು : ತಂಗಿಯ ಆತ್ಮಹತ್ಯೆಯಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಗಲ್ಫ್ನಿಂದ ಮಂಗಳೂರಿಗೆ ಮರಳಿದ ಕೆಲವೇ ಗಂಟೆಗಳಲ್ಲಿ ಲಾಡ್ಜ್ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ.
ಮೃತರನ್ನು ಕೇರಳದ ಬೇಕಲ್ನ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ (24) ಎಂದು ಗುರುತಿಸಲಾಗಿದೆ.
ಅರ್ಜುನ್ ಅವರ ತಂಗಿ ಐಜಾ ಆರ್. ಮಹೇಶ್ ಕಳೆದ ಜೂನ್ನಲ್ಲಿ ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯ ಬಳಿಕ ಅರ್ಜುನ್ ತೀವ್ರವಾಗಿ ನೊಂದಿದ್ದರು ಎನ್ನಲಾಗಿದೆ.
ಭಾನುವಾರ ಗಲ್ಫ್ನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ್ದ ಅರ್ಜುನ್ ಬಳಿಕ ನಾಪತ್ತೆಯಾಗಿದ್ದರು. ಅವರ ಮೊಬೈಲ್ ಸ್ವಿಚ್ಆಫ್ ಆಗಿದ್ದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು.
ಸೋಮವಾರ ಮಧ್ಯಾಹ್ನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮರವೂರಿನ ಲಾಡ್ಜ್ವೊಂದರ ಕೊಠಡಿಯಲ್ಲಿ ಅರ್ಜುನ್ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಾಹಿತಿ ತಿಳಿದು ಬಜ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ತಂಗಿಯ ಸಾವಿನಿಂದ ನೊಂದಿದ್ದ ಎನ್ನಲಾದ ಸಹೋದರನೂ ಇದೀಗ ಮೃತಪಟ್ಟಿರುವುದು ಕುಟುಂಬಸ್ಥರಿಗೆ ಮತ್ತಷ್ಟು ಆಘಾತ ತಂದಿದೆ. ಒಂದೇ ಕುಟುಂಬದ ಇಬ್ಬರು ಯುವ ಮಕ್ಕಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

