ಕಾಸರಗೋಡು : ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಸಂಪೂರ್ಣವಾಗಿ ಬೆಂಕಿಗಾಹುತಿಯಾದ ಘಟನೆ ತೃಕ್ಕರಿಪುರದಲ್ಲಿ ಮಂಗಳವಾರ ಸಂಜೆ ನಡೆದಿದೆ.
ತೃಕ್ಕರಿಪುರ ಬೀರಿಚೇರಿ ಕೂಲೇರಿಯ ಕೆ.ಪಿ. ನಿಸಾರ್ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಗ್ಯಾಸ್ ಸೋರಿಕೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಮನೆಯೊಳಗೆ ವ್ಯಾಪಿಸಿದೆ. ಬಳಿಕ ಸಿಲಿಂಡರ್ ಭಾರಿ ಶಬ್ದದೊಂದಿಗೆ ಸ್ಫೋಟಗೊಂಡಿದೆ.
ಸ್ಫೋಟದ ತೀವ್ರತೆಗೆ ಮನೆಯ ಒಳಭಾಗಕ್ಕೆ ಭಾರೀ ಹಾನಿಯಾಗಿದ್ದು, ಪೀಠೋಪಕರಣಗಳು, ಎಲೆಕ್ಟ್ರಾನಿಕ್ ಉಪಕರಣಗಳು ಸೇರಿದಂತೆ ಮನೆಯಲ್ಲಿದ್ದ ಬಹುತೇಕ ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮನೆಯ ಕೆಲವು ಭಾಗಗಳಿಗೂ ಹಾನಿಯಾಗಿರುವುದಾಗಿ ತಿಳಿದುಬಂದಿದೆ.
ಘಟನೆ ಸಂಭವಿಸಿದ ವೇಳೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನಾಲ್ವರು ಮನೆಯೊಳಗಿದ್ದರು. ಗ್ಯಾಸ್ ಸೋರಿಕೆಯಾಗಿ ಬೆಂಕಿ ಆವರಿಸುತ್ತಿರುವುದನ್ನು ಗಮನಿಸಿದ ಅವರು ತಕ್ಷಣವೇ ಸಮಯಪ್ರಜ್ಞೆ ಮೆರೆದು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಅವರು ಹೊರಬಂದ ಕೆಲವೇ ಕ್ಷಣಗಳಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆಯ ಮಾಹಿತಿ ದೊರೆತ ತಕ್ಷಣ ತೃಕ್ಕರಿಪುರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಕಾರದೊಂದಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಘಟನೆಯಿಂದ ಮನೆಯಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟುಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಗ್ಯಾಸ್ ಸೋರಿಕೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪರಿಶೀಲನೆ ನಡೆಯುತ್ತಿದೆ.

