ಶಿವಪುರ : ಬಿಲ್ಲವರ ಸೇವಾ ಸಂಘ (ರಿ.), ಶಿವಪುರದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ಭಾನುವಾರ ಶಿವಪುರದ ಶ್ರೀ ಶಂಕರ ಸಭಾಭವನದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗುರು ಪೂಜೆ, ವಿದ್ಯಾರ್ಥಿ ವೇತನ ವಿತರಣೆ, ವಿವಿಧ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದಿವಾನಂದ ಸಾಲ್ಯಾನ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀ ಎಂ. ಮಂಜುನಾಥ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ನಾರಾಯಣ ಗುರುಗಳ ತತ್ವ ಸಿದ್ಧಾಂತದ ಬಗ್ಗೆ ಮಾತನಾಡಿದರು . ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಸಂಘದ ಗೌರವಾಧ್ಯಕ್ಷ ಶ್ರೀ ಶೇಖರ್ ಪೂಜಾರಿ ಹಾಗೂ ಕಾರ್ಯದರ್ಶಿ ರಾಧಾಕೃಷ್ಣ ಪೂಜಾರಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ‘ಐಎಎಸ್ ದರ್ಶನ್’ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಅಕಾಡೆಮಿಯ ಸಂಸ್ಥಾಪಕ ದರ್ಶನ್ ಚಂದ್ರಶೇಖರ್ ಅವರು ‘ಕನಸಿನ ಉದ್ಯೋಗ ಪಡೆಯಲು ನಮ್ಮ ಸಿದ್ಧತೆ ಹೇಗಿರಬೇಕು?’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಯುವಜನರು ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿರ್ಧರಿಸಿಕೊಂಡು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವ್ಯವಸ್ಥಿತವಾಗಿ ಸಿದ್ಧತೆ ನಡೆಸಬೇಕು. ಶಿಕ್ಷಣದ ಜೊತೆಗೆ ಸಮಯದ ಸದ್ಬಳಕೆ, ನಿರಂತರ ಪರಿಶ್ರಮ ಹಾಗೂ ಸೂಕ್ತ ಮಾರ್ಗದರ್ಶನವನ್ನು ಅಳವಡಿಸಿಕೊಂಡರೆ ಸರ್ಕಾರಿ ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಪಡೆಯಲು ಸಾಧ್ಯ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಆಶಾ ಕಾರ್ಯಕರ್ತೆ ಬೇಬಿ ಪೂಜಾರ್ತಿ ಮತ್ತು ಕುಮಾರಿ ಮೇಘಾ ಇವರನ್ನು ಸನ್ಮಾನಿಸಲಾಯಿತು. ಹರೀಶ್ ಪೂಜಾರಿ ಕಾರ್ಯಕ್ರಮ ನಿರೂಪಣೆಗೈದರು, ರಾಘವೇಂದ್ರ ಪೂಜಾರಿ ಸ್ವಾಗತಿಸಿ, ಸತೀಶ್ ಪೂಜಾರಿ ವಂದನಾರ್ಪಣೆ ಮಾಡಿದರು.

