ಬಿಜೆಪಿ ಹಿರಿಯ ನಾಯಕ ಕರಂಬಳ್ಳಿ ರಘುರಾಮ ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

0
7

ಬಿಜೆಪಿ ಹಿರಿಯ ನಾಯಕ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ, ಜನಸಂಘದ ಕಾಲದಿಂದಲೂ ಬೂತ್ ಮಟ್ಟದಲ್ಲಿ ಸದೃಢ ಪಕ್ಷ ಸಂಘಟನೆಗೆ ವಿಶೇಷ ಕೊಡುಗೆ ನೀಡಿದ್ದ ಬಿಜೆಪಿ ಹಿರಿಯ ನಾಯಕ ಕರಂಬಳ್ಳಿ ರಘುರಾಮ ಶೆಟ್ಟಿ (82 ವರ್ಷ) ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಪಕ್ಷವನ್ನು ತಳ ಮಟ್ಟದಿಂದ ಕಟ್ಟಿ ಬೆಳೆಸಲು ನಾಂದಿ ಹಾಡಿದ್ದ ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯರಾಗಿದ್ದ ದಿ. ಕರಂಬಳ್ಳಿ ಸಂಜೀವ ಶೆಟ್ಟಿ ಅವರ ಸೋದರಳಿಯ ಕರಂಬಳ್ಳಿ ರಘುರಾಮ ಶೆಟ್ಟಿ ಅವರು ಶಿವಳ್ಳಿ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿ ಸೇವೆ ಸಲ್ಲಿಸಿರುವ ಜೊತೆಗೆ ಸಾಮಾಜಿಕ ಕಳಕಳಿಯಿಂದ ನಿಟ್ಟೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ತಾಂಗದಗಡಿ ವೀರ ಮಾರುತಿ ವ್ಯಾಯಾಮ ಶಾಲೆಯ ಅಧ್ಯಕ್ಷರಾಗಿ, ನವಜೋತಿ ಕ್ರಿಕೆಟರ್ಸ್ ಅಧ್ಯಕ್ಷರಾಗಿ, ಕರಂಬಳ್ಳಿ ಫ್ರೆಂಡ್ಸ್ ನ ಗೌರವಾಧ್ಯಕ್ಷರಾಗಿ, ನಿಟ್ಟೂರು ಪ್ರೌಢ ಶಾಲೆಯ ಎಜುಕೇಶನ್ ಸೊಸೈಟಿ, ಅಂಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂತಾದ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಮಿತಿ ಸದಸ್ಯರಾಗಿ ಸಾರ್ಥಕ ಸೇವೆ ಸಲ್ಲಿಸಿರುವ ಸಹಿತ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಡಿರುವುದು ಸ್ಮರಣೀಯ. ಅವರ ಅಗಲುವಿಕೆ ಪಕ್ಷಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ. ಪತ್ನಿ, ಮಕ್ಕಳು ಮತ್ತು ಕುಟುಂಬಿಕರಿಗೆ ಅವರ ಆಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಂಬಳ್ಳಿ ರಘುರಾಮ ಶೆಟ್ಟಿ ನಿಧನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲೆಯ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ, ವಿ.ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೊಟ್ಯಾಡಿ, ಡಾ. ಧನಂಜಯ ಸರ್ಜಿ ಹಾಗೂ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರುಗಳಾದ ಕೆ.ಉದಯ ಕುಮಾರ್ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಟ್ಟಾರ್ ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್ ಸಹಿತ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.