ಅಭಿಯಾನವನ್ನು ಯಶಸ್ವಿಗೊಳಿಸಲು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ
ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾಂವಿಧಾನಿಕ ಹುದ್ದೆಯಲ್ಲಿನ ಸಾರ್ವಜನಿಕ ಸೇವೆಗೆ 25 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅವರ ಜನ್ಮ ದಿನ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ಒಂದು ತಿಂಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಸೇವಾ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಆರು ಮಂಡಲಗಳ ವ್ಯಾಪ್ತಿಯಲ್ಲಿ ವಿವಿಧ ಸೇವಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಂಡು ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಅಭಿಯಾನದ ಅಂಗವಾಗಿ ಈಗಾಗಲೇ ಜಿಲ್ಲಾ ಹಾಗೂ ಮಂಡಲ ಮಟ್ಟದ ಅಭಿಯಾನ ತಂಡಗಳು ಮತ್ತು ವಿವಿಧ ಕಾರ್ಯಕ್ರಮಗಳ ಜಿಲ್ಲಾ ಹಾಗೂ ಮಂಡಲ ಪ್ರಮುಖರ ತಂಡಗಳನ್ನು ರಚಿಸಲಾಗಿದೆ. ನಿಗದಿತ ಅವಧಿಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಸಮನ್ವಯದೊಂದಿಗೆ ಅನುಷ್ಠಾನಗೊಳಿಸಿ, ಸಮಾಜದ ವಿವಿಧ ವರ್ಗಗಳನ್ನು ಒಳಗೊಳ್ಳುವ ಮೂಲಕ ಅಭಿಯಾನವನ್ನು ಅರ್ಥಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.
ಅಭಿಯಾನದ ಸಂದರ್ಭದಲ್ಲಿ ಈ ಕೆಳಗಿನಂತೆ ಒಟ್ಟು 13 ವಿವಿಧ ಸೇವಾ ಕಾರ್ಯ ಹಾಗೂ ಜನ ಸಂಪರ್ಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ:
- ಆಶೀರ್ವಾದದ ದೀಪ
- 25 ಕೋಟಿ ಮಕ್ಕಳ ಕನಸಿನ ಭಾರತ
- ನಮೋ ಸೇವಾ ಗಾಥಾ
- ಅಂಗಳದ ಉತ್ಸವ
- ಬದಲಾವಣೆಯ ಕಥೆ
- ವಿಕಸಿತ ಭಾರತ ಸಂಕಲ್ಪ ಯಾತ್ರೆ
- ಸೇವಾ ಜ್ಯೋತಿ ಯಾತ್ರೆ
- ಸೇವಾ ಸಂಕಲ್ಪ ಯಾತ್ರೆ
- ಸೇವೆಯೇ ನನ್ನ ಕೊಡುಗೆ
- ಸೇವಾ ಸೇತು ಅಭಿಯಾನ
- ರಂಗೋಲಿ ರಾಷ್ಟ್ರ
- ರಾಷ್ಟ್ರೀಯ ಇನ್ನೋವೇಷನ್ ಚಾಲೆಂಜ್
- ಜನ ಸೇವಕ ಮಹಾ ಕುಂಭ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯ ಆಶಯಗಳಿಗೆ ಪೂರಕವಾಗಿ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರನ್ನು ತಲುಪುವ ಉದ್ದೇಶದಿಂದ ರೂಪಿಸಿರುವ ಅಭಿಯಾನದ ಎಲ್ಲಾ ಸೇವಾ ಕಾರ್ಯ ಚಟುವಟಿಕೆಗಳನ್ನು ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬದ್ಧತೆ ಮತ್ತು ಸಮರ್ಪಣಾ ಮನೋಭಾವದಿಂದ ಕಾರ್ಯಗತಗೊಳಿಸಿ ‘ಸೇವಾ ಸಂಕಲ್ಪ ಅಭಿಯಾನ’ವನ್ನು ಯಶಸ್ವಿಗೊಳಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

