ಮುಲ್ಕಿ: ತಾಲೂಕು ವ್ಯಾಪ್ತಿಯಲ್ಲಿ ಕಳೆದ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಕಿಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಚನಕೆರೆಗೆ ದಾನಿಗಳಿಂದ ಸುಮಾರು ರೂ. 75,000 ವೆಚ್ಚದಲ್ಲಿ ನಿರ್ಮಿಸಲಾದ ತಡೆಗೋಡೆ ಕುಸಿದು ಅಪಾಯಕಾರಿಯಾಗಿ ಪರಿಣಮಿಸಿತ್ತು. ಸ್ಥಳಕ್ಕೆ ಕಿಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಕಾಸ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಪೂರ್ಣಿಮ, ಪಂಚಾಯತ್ ಸಿಬಂದಿಗಳಾದ ಯತೀಶ್, ಪ್ರಕಾಶ್ ಭೇಟಿ ನೀಡಿ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಬ್ಯಾರಿಕೆಡ್ ಅಳವಡಿಸಿ ಎಚ್ಚರಿಕೆಯ ಸೂಚನಾ ಫಲಕವನ್ನು ಅಳವಡಿಸಿದ್ದಾರೆ.
ಕೆಂಚನಕೆರೆ ಸಮೀಪವೇ ಮುಲ್ಕಿ ಕಿನ್ನಿಗೋಳಿ ರಾಜ್ಯ ಹೆದ್ದಾರಿ ಬದಿ ಅಮೃತ್ 2.0 ಕುಡಿಯುವ ನೀರಿನ ಪೈಪ್ ಲೈನ್ ಅವೈಜ್ಞಾನಿಕ ಕಾಮಗಾರಿಯಿಂದ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಹೊಂಡಮಯವಾಗಿ ಅವ್ಯವಸ್ಥೆಗಳ ಆಗರವಾಗಿದೆ. ಪೈಪ್ ಲೈನ್ ಗೆ ತೋಡಿದ ಚರಂಡಿ ಮುಚ್ಚದೆ ಕೆರೆಯಂತಾಗಿದ್ದು , ಮಳೆಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಲೋಕೋಪಯೋಗಿ ಇಲಾಖೆ ಕೂಡಲೇ ಎಚ್ಚೆತ್ತು ಈ ಭಾಗದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಆಟೋ ಚಾಲಕ ಮೋಹನ್ ಕುಬೆವೂರು ಒತ್ತಾಯಿಸಿದ್ದಾರೆ.

