ದಾವಣಗೆರೆ; ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಹಾಗೂ ಕಲಾಕುಂಚ ಮಹಿಳಾ ವಿಭಾಗದ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 5 ರಂದು ಭಾನುವಾರ ಕಲಾಕುಂಚ ಕಛೇರಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಸಾರ್ವಜನಿಕವಾಗಿ ಉಚಿತ ವಿವಿಧ ಸ್ಪರ್ಧೆಗಳ ಸಮಾರಂಭ ಉದ್ಘಾಟನೆಯಾಗಲಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸತೀಶ್ಕುಮಾರ್, ಪಿ.ವಲ್ಲೇಪುರೆ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಲಾಕುಂಚ ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಸಂಸ್ಥೆಯ ಗೌರವಾಧ್ಯಕ್ಷರಾದ ಗಿರಿಜಮ್ಮ ನಾಗರಾಜಪ್ಪ ಮತ್ತು ವಸಂತಿ ಮಂಜುನಾಥ್ ಆಗಮಿಸಲಿದ್ದಾರೆ ಎಂದು ಮಹಿಳಾ ಘಟಕದ ಉಪಾಧ್ಯಕ್ಷರಾದ ಲಲಿತಾ ಕಲ್ಲೇಶ್ ಪ್ರಕಟಿಸಿದ್ದಾರೆ.
ಸಾರ್ವಜನಿಕವಾಗಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಆಟೋಟ ಸ್ಪರ್ಧೆ, ಮಹಿಳೆಯರಿಗೆ ಆಕರ್ಷಕ ಗೃಹಿಣಿ ಸ್ಪರ್ಧೆ, ಪತಿ-ಪತ್ನಿಯರಿಗೆ ಆಕರ್ಷಕ ದಂಪತಿಗಳ ಸ್ಪರ್ಧೆಗಳು ಉಚಿತವಾಗಿದ್ದು ಪ್ರತಿಭಾವಂತರಿಗೆ ಅವರವರ ಪ್ರತಿಭೆಗಳನ್ನು ಅನಾವರಣಗೊಳಿಸಿ ಮುಕ್ತವಾದ ವೇದಿಕೆ ಕಲ್ಪಿಸುವ ಸದುದ್ದೇಶದಿಂದ ಈ ಸಮಾರಂಭ ಹಮ್ಮಿಕೊಂಡಿದ್ದು ಸಾರ್ವಜನಿಕರು ವಿವಿದ ಕ್ಷೇತ್ರದ ಪ್ರತಿಭಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದಸರಾ ಸಂಭ್ರಮ ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.
