ಮಂಗಳೂರು :ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15ರಿಂದ ಅಕ್ಟೋಬರ್ 30ರ ನಡುವಿನ ಅವಧಿಯಲ್ಲಿ ಕಳ್ಳತನವಾಗಿದ್ದ 233 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡು ಅದರ ಮಾಲೀಕರಿಗೆ ಹಸ್ತಾಂತರಿಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಿಥುನ್ ಎಚ್. ಎನ್ ಹೇಳಿದರು.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊಬೈಲ್ ಫೋನ್ ಕಳ್ಳತನದ ಬಗ್ಗೆ ನಿಗಾ ಇಡಲು ಸೆನ್ ಠಾಣೆಯ ಎಸಿಪಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು ಎಂದರು.
ಮೊಬೈಲ್ ಫೋನ್ ಕಳ್ಳತನವಾದಾಗ, ಸಂಶಯಾಸ್ಪದ ಕರೆಗಳು ಬಂದಾಗ ‘ಸಂಚಾರ್ ಸಾಥಿ’ ಪೋರ್ಟಲ್ ಬಳಸಿಕೊಂಡು ನಂಬರ್ ಅನ್ನು ಬ್ಲಾಕ್ ಮಾಡಿಸಬಹುದು. ಸೈಬರ್ ಅಪರಾಧ ಸಹಾಯವಾಣಿ 1930 ಈ ಸಂಖ್ಯೆಗೆ ಕರೆ ಮಾಡಬಹುದು. ಜನರು ಈ ಬಗ್ಗೆ ತಿಳಿವಳಿಕೆ ಹೊಂದಿರಬೇಕು ಎಂದರು.

