ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಅನಧಿಕೃತವಾಗಿ ರಸ್ತೆಯ ಚರಂಡಿಗಳ ಮೇಲೆ, ಶಾಲಾ ವಠಾರದಲ್ಲಿ, ಜನ ನಿಬಿಡ ಪ್ರದೇಶಗಳಲ್ಲಿ, ಬಸ್ ನಿಲ್ದಾಣ ಸೇರಿದಂತೆ ಇತರೆ ಸ್ಥಳಗಳಲ್ಲಿ ಆಹಾರ ಹಾಕಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತ ಮಹಾಂತೇಶ್ ತಿಳಿಸಿದ್ದಾರೆ.
ಯಾವುದೇ ಸಾಕು ನಾಯಿಗಳನ್ನು ಹಾಗೂ ಅದರ ಮರಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ತಂದು ಬಿಟ್ಟಿರುವುದು ಕಂಡು ಬಂದಲ್ಲಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮನೆಗಳಲ್ಲಿ ನಾಯಿ ಸಾಕುವವರು ನಾಯಿಗಳ ಮರಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ತಂದು ಬಿಡುತ್ತಿರುವುದು ಕಂಡು ಬಂದಿದ್ದು, ಇದರಿಂದ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಸಾರ್ವಜನಿಕರು ಮನೆಗಳಲ್ಲಿ ಸಾಕುವ ನಾಯಿಗಳಿಗೆ ರೇಬಿಸ್ ಲಸಿಕೆ ಹಾಗೂ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಬೇಕು. ಜೊತೆಗೆ ಸಾಕು ನಾಯಿಗಳಿಗೆ ಬೆಲ್ಟ್ ಅಳವಡಿಸಬೇಕು.
ಜಾಗ ಗುರುತು
ನಗರಸಭೆಯಿಂದ ಪ್ರಾಥಮಿಕ ಹಂತದಲ್ಲಿ ಬೀಡಿನ ಗುಡ್ಡೆ ಹಿಂದೂ ರುದ್ರ ಭೂಮಿ ಎದುರುಗಡೆ, ಆದಿ ಉಡುಪಿ ಮಾರುಕಟ್ಟೆ ಹಿಂಬದಿ, ಇಂದ್ರಾಳಿ ಹಿಂದೂ ರುದ್ರ ಭೂಮಿ ಎದುರುಗಡೆ, ಪರ್ಕಳ ಸ್ವಾಗತ ಗೋಪುರದ ಹತ್ತಿರ, ನಿಟ್ಟೂರು ಕೊಳಚೆ ನೀರು ಶುದ್ದೀಕರಣ ಘಟಕದ ಎದುರುಗಡೆ, ಪೆರಂಪಳ್ಳಿ ಮುಖ್ಯ ರಸ್ತೆಯ ಭರತೀಯ ವಿಕಾಸ ಟ್ರಸ್ಟ್ ಕೆಳಗಡೆ, ‘ರಾಜ್ ಫಿಶ್ ಮಿಲ್ ಹತ್ತಿರ, ಆದಿ ಉಡುಪಿ ಮಲ್ಪೆ ರಸ್ತೆಯ ಹೆಲಿಪ್ಯಾಡ್ ಹತ್ತಿರ, ಕಕ್ಕುಂಜೆ ನಾರಾಯಣ ನಗರ ಹೋಗುವ ರಸ್ತೆಯ ತಿರುವು ಬಳಿ ಹಾಗೂ ಬೈಲೂರು ಹನುಮಾನ್ ಗ್ಯಾರೇಜ್ ಡಯಾನ ರಸ್ತೆ ವಿಜಯ ವೀರ ಸಂಘದ ಹತ್ತಿರ ನಿಯಮಾನುಸಾರ ಷರತ್ತು ವಿಧಿಸಿ, ಬೀದಿ ನಾಯಿಗಳಿಗೆ ಆಹಾರ ಹಾಕಲು ಅನುಮತಿಯನ್ನು ನೀಡಲು ಸ್ಥಳಗಳನ್ನು ಗುರುತಿಸಲಾಗಿದೆ. ಇದರೊಂದಿಗೆ ಇತರೆ ಯಾವುದೇ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ಹಾಕಲು ಸಾರ್ವಜನಿಕರು ಮುಂದೆ ಬಂದಲ್ಲಿ ನಗರಸಭಾ ಕಛೇರಿಗೆ ಲಿಖಿತ ಮೂಲಕ ಮನವಿ ಸಲ್ಲಿಸಿದ್ದಲ್ಲಿ, ಪರಿಶೀಲಿಸಿ ಅನುಮತಿ ನೀಡಲು ಕ್ರಮವಹಿಸಲಾಗುವುದು.
ಬೀದಿ ನಾಯಿಗಳಿಗೆ ಆಹಾರವನ್ನು ಹಾಕುವವರಿಗೆ ಅನುಮತಿ ಹಾಗೂ ಗುರುತಿನ ಚೀಟಿ ಕಡ್ಡಾಯವಾಗಿದ್ದು, ಆಹಾರ ಹಾಕುವವರು ನಗರಸಭೆಯ ಕಛೇರಿಯಿಂದ ಲಿಖಿತ ಮೂಲಕ ಅರ್ಜಿಯನ್ನು ನೀಡಿ ನಿಯಮಾನುಸಾರ ಅನುಮತಿ ಪಡೆದುಕೊಳ್ಳಬೇಕು. ಬೀದಿ ನಾಯಿಗಳಿಗೆ ಆಹಾರ ಹಾಕುವವರೇ ಈ ನಾಯಿಗಳಿಗೆ ರೇಬಿಸ್ ಲಸಿಕೆ ಹಾಗೂ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಬೇಕು.

