ಉಡುಪಿ: ಶ್ರೀ ಕೃಷ್ಣಮಠಕ್ಕೆ ನ. 28 ರಂದು ಆಗಮಿಸುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣ ನಿರ್ಮಿಸುವ ಪ್ರಸ್ತಾವನೆ ಸಲ್ಲಿಕೆ ಸಂಬಂಧ ರಾಜ್ಯ ಸರಕಾರದ ಅನುಮತಿಯನ್ನು ಜಿಲ್ಲಾಡಳಿತ ಕೋರಿದೆ.
ಪಡುಬಿದ್ರಿ ಸಮೀಪದ ಎರ್ಮಾಳು ಮತ್ತು ಸಾಂತೂರಿನಲ್ಲಿ ಕೈಗಾರಿಕೆಗಳಿಗೆ ಸ್ವಾಧೀನಪಡಿಸಿಕೊಂಡ 941 ಎಕ್ರೆ ಭೂಮಿಯಲ್ಲಿ ಉಡುಪಿ, ಉತ್ತರಕನ್ನಡ ಜಿಲ್ಲೆಯನ್ನು ಕೇಂದ್ರೀಕರಿಸಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಕುರಿತು ಜಿಲ್ಲಾಧಿಕಾರಿ ಕಚೇರಿಯಿಂದ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಗೆ ಪತ್ರವನ್ನು ಬರೆಯಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಮಾನ ನಿಲ್ದಾಣ ನಿರ್ಮಾಣಕ್ಕೆ ದೊಡ್ಡ ಮಟ್ಟದ ಹೂಡಿಕೆ ಅಗತ್ಯವಿರುವ ಕಾರಣ ಅದರ ಕಾರ್ಯಸಾಧ್ಯತೆ ವರದಿ ಮುಖ್ಯ. ಅದಿಲ್ಲದೇ ಪ್ರಧಾನಿಗೆ ಪ್ರಸ್ತಾವನೆ ಸಲ್ಲಿಸಬೇಕೇ ಎಂಬ ಬಗ್ಗೆ ಚರ್ಚಿಸಲಾಗುತ್ತಿದೆ ಎಂದಿದ್ದಾರೆ.
ಇದರೊಂದಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಈ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆಯಲಾಗಿದೆ. ಪ್ರಸ್ತಾವನೆ ಸಲ್ಲಿಸುವ ಕುರಿತು ಇನ್ನೂ ನಿರ್ಧಾರ ಆಗಿಲ್ಲ ಎಂದು ತಿಳಿಸಿದ್ದಾರೆ.
ಉಡುಪಿ, ದ.ಕ., ಉತ್ತರ ಕನ್ನಡ, ಕೊಡಗು ಜಿಲ್ಲೆಯವರು ಬಜಪೆ ವಿಮಾನ ನಿಲ್ದಾಣವನ್ನು ಆಶ್ರಯಿಸುತ್ತಿದ್ದಾರೆ. ಉಡುಪಿ ಕೇಂದ್ರೀತವಾಗಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಿದರೆ ಉಡುಪಿ, ಉತ್ತರ ಕನ್ನಡ, ಮಲೆನಾಡು ಭಾಗದ ಜನರಿಗೆ ಅನುಕೂಲ ಆಗಲಿದೆ. ಜತೆಗೆ ನಂದಿಕೂರು ಬಳಿ ಯುಪಿಸಿಎಲ್ನ ಎರಡನೆಯ ಹಂತದ ವಿಸ್ತರಣೆಗೂ ಹಲವು ತಾಂತ್ರಿಕ ತೊಡಕಿದ್ದು, ಈ ಪ್ರದೇಶವನ್ನು ವಿಮಾನ ನಿಲ್ದಾಣಕ್ಕೆ ಬಳಸಬಹುದು ಎನ್ನಲಾಗುತ್ತಿದೆ.

