ಯಕ್ಷಗಾನ ನಮ್ಮ ಹಿರಿಯರು ನಮಗೆ ನೀಡಿರುವ ಸರ್ವಾಂಗ ಸುಂದರ ಕಲಾಪ್ರಕಾರ. ಇದು ವಿದ್ಯಾ ರ್ಥಿಗಳಲ್ಲಿ ಭಾಷಾ ಕೌಶಲ, ಪುರಾಣಜ್ಞಾನ, ಆತ್ಮಸ್ಥೈರ್ಯ ಬೆಳೆಸುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಸಂಸ್ಕಾರವಂತರನ್ನಾಗಿ ಮಾಡುತ್ತದೆ ಎಂದು ಶಾಸಕ ಗುರ್ಮೆ ಸುರೇಶ ಶೆಟ್ಟಿಯವರು ಹಿರಿಯಡಕದಲ್ಲಿ ಕಾಪು ಕ್ಷೇತ್ರದ ನಾಲ್ಕು ಶಾಲೆಗಳ ಪ್ರದರ್ಶನಗಳನ್ನು ಉದ್ಘಾಟಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಉಡುಪಿಯ ಯಕ್ಷ ಶಿಕ್ಷಣ ಟ್ರಸ್ಟ್ ಶ್ರೀ ವೀರಭದ್ರ ದೇವಸ್ಥಾನ ಹಿರಿಯಡಕ, ಪ್ರದರ್ಶನ ಸಂಘಟನಾ ಸಮಿತಿ ಹಿರಿಯಡಕ, ಯಕ್ಷಗಾನ ಕಲಾರಂಗ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸೆಲ್ಕೋ ಸೋಲಾರ್ ಲೈಟ್. ಪ್ರೈ. ಲಿ. ಅಧಿಕಾರಿ ಗುರುಪ್ರಕಾಶ್ ಶೆಟ್ಟಿ, ಉದ್ಯಮಿ ಶ್ರೀನಿವಾಸ್ ರಾವ್, ಹಿರಿಯಡಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಭಟ್, ಮಣಿಪುರ ಸರಕಾರಿ ಸಂಯುಕ್ತ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ರೂಪರೇಖಾ ಅಭ್ಯಾಗತರಾಗಿ ಭಾಗವಹಿಸಿದ್ದರು. ಟ್ರಸ್ಟಿ ವಿ.ಜಿ.ಶೆಟ್ಟಿ ಸ್ವಾಗತಿಸಿದರು. ನಾರಾಯಣ ಎಂ.ಹೆಗಡೆ ಮತ್ತು ಡಾ. ರಾಜೇಶ್ ನಾವುಡ ಸಹಕರಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.ಸಭೆಯ ಪೂರ್ವದಲ್ಲಿ ಸರಕಾರಿ ಪ್ರೌಢಶಾಲೆ ಮಣಿಪುರ ಇಲ್ಲಿನ ವಿದ್ಯಾರ್ಥಿಗಳಿಂದ ಕೃಷ್ಣಾರ್ಜುನ ಕಾಳಗ, ಬಳಿಕ ಹಿರಿಯಡ್ಕ ಪದವಿಪೂರ್ವ ಕಾಲೇಜ್ ವಿದ್ಯಾರ್ಥಿಗಳಿಂದ ವೀರಮಣಿ ಕಾಳಗ ಯಕ್ಷಗಾನ ಪ್ರದರ್ಶಿಸಲ್ಪಟ್ಟಿತು.

