ದೇಶದಲ್ಲಿ ಪ್ರತಿ ಪ್ರಜೆಗಳಿಗೆ ಸಮಾನ ಅವಕಾಶ ಮತ್ತು ಶೋಷಿತ ಸಮುದಾಯಗಳು ಮುಖ್ಯವಾಹಿನಿಗೆ ಸೇರಲು ಸಾಧ್ಯವಾಗಿರುವುದಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕಾರಣ ಎಂದು ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.
ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಜಿಲ್ಲಾ ಎಸ್.ಸಿ. ಮೋರ್ಚಾ, ಜಿಲ್ಲಾ ಎಸ್.ಟಿ. ಮೋರ್ಚಾ ಮತ್ತು ಜಿಲ್ಲಾ ಒಬಿಸಿ ಮೋರ್ಚಾ ನೇತೃತ್ವದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿದರು.
ದೇಶದಲ್ಲಿ 356ನೇ ವಿಧಿ ದುರುಪಯೋಗಪಡಿಸಿಕೊಂಡು ಚುನಾಯಿತ ಸರ್ಕಾರಗಳನ್ನು 90 ಬಾರಿ ಅಮಾನತುಗೊಳಿಸಿದ ಕಾಂಗ್ರೆಸ್ ಇಂದು ಸಂವಿಧಾನದ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ ಸಂಗತಿ. ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ 5 ಸ್ಥಳಗಳನ್ನು ಪಂಚತೀರ್ಥ ಹೆಸರಿನಲ್ಲಿ ಅಭಿವೃದ್ಧಿಪಡಿಸಿದ್ದಾರೆ. ಅವರಿಗೆ ಭಾರತರತ್ನ ಗೌರವವನ್ನು ಕೊಡಬೇಕಾದರೆ ಕಾಂಗ್ರೆಸ್ ಸರ್ಕಾರ ತೊಲಗಬೇಕಾಯಿತು. 2047ಕ್ಕೆ ವಿಕಸಿತ ಭಾರತ ನಿರ್ಮಾಣ ಮಾಡುವ ಮೂಲಕ ಅಂಬೇಡ್ಕರ್ ಅವರಿಗೆ ನೈಜ ಗೌರವ ಸಲ್ಲಿಸುವ ಅಗತ್ಯವಿದೆ ಎಂದು ಹೇಳಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ 42 ಸಾವಿರ ಕೋಟಿ ರೂ. ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ಆದರೂ ದಲಿತ ಮುಖಂಡರೆನಿಸಿಕೊಂಡವರು ಚುನಾವಣೆ ಸಂದರ್ಭದಲ್ಲಿ ದಲಿತರ ಕಾಲೋನಿಗಳಿಗೆ ತೆರಳಿ ಬಿಜೆಪಿ ಓಟ್ ಹಾಕಬೇಡಿ ಎನ್ನುತ್ತಿದ್ದಾರೆ. ಈ ಬಗ್ಗೆ ಮೋರ್ಚಾಗಳು ಗಟ್ಟಿಧ್ವನಿಯಲ್ಲಿ ಮಾತನಾಡಬೇಕು. ಜನರಿಗೆ ನೈಜ ವಿಚಾರಗಳನ್ನು ತಿಳಿಸಬೇಕು ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾಧ್ಯಕ್ಷ ಕುಮಾರ್ದಾಸ್, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ವಿಜಯಕೊಡವೂರು ಉಪಸ್ಥಿತರಿದ್ದರು.

