ಉಡುಪಿ ನಗರ ಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡ್ ನಲ್ಲಿ ಬಿಜೆಪಿಯ ಮೊದಲ ನಗರ ಸಭಾ ಸದಸ್ಯೆಯಾಗಿ, ಕಲ್ಮಾಡಿ ವಾರ್ಡಿನಲ್ಲಿ ಪಕ್ಷಕ್ಕೆ ಭದ್ರ ಬುನಾದಿಯನ್ನು ಹಾಕಿ ಕೊಟ್ಟ ಉಡುಪಿ ನಗರ ಸಭೆಯ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖರ್ ಕಲ್ಮಾಡಿ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಸರಳ ಸಜ್ಜನಿಕೆಯ ಕ್ರಿಯಾಶೀಲ ವ್ಯಕ್ತಿತ್ವದೊಂದಿಗೆ ಡಾ! ವಿ.ಎಸ್. ಆಚಾರ್ಯ ಅವರ ಗರಡಿಯಲ್ಲಿ ಪಳಗಿದ ಇಂದಿರಾ ಶೇಖರ್ ಅವರು ಸದಾ ಸಮಾಜ ಸೇವಾ ಚಟುವಟಿಕೆಗಳಲ್ಲಿ ನಿರತರಾಗಿ, ಜನಾನುರಾಗಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇಂದಿರಾ ಶೇಖರ್ ಅವರು ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಮಹತ್ವಪೂರ್ಣ. ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.
ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಆಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುತ್ಯಾರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

