ಮುಲ್ಕಿ : ಮುಲ್ಕಿ ತಾಲೂಕಿನ ಪಡುಪಣಂಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಾಯರು ಗ್ರಾಮದ ಕೆರೆಕಾಡು ಸರಕಾರಿ ಜಾಗದಲ್ಲಿ ಬಹುಮುಖ್ಯ ಸಾರ್ವಜನಿಕ ಅಭಿವೃದ್ಧಿ ಯೋಜನೆಗಳಿಗೆ ಜಾಗವನ್ನು ಈಗಾಗಲೇ ಕಾಯ್ದಿರಿಸಲಾಗಿದೆ.
ಈ ಜಾಗದಲ್ಲಿ ಮುಲ್ಕಿ ತಾಲೂಕು ನ್ಯಾಯಾಲಯ, ಬಡ ಹಾಗೂ ಮಧ್ಯಮ ವರ್ಗದ ಜನತೆಗೆ ಸುಲಭ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಆಯುಷ್ಮಾನ್ ಆರೋಗ್ಯ ಕೇಂದ್ರ, ಜೊತೆಗೆ ಸಾರ್ವಜನಿಕ ರಂಗಮಂದಿರ ನಿರ್ಮಾಣಕ್ಕೆ ಭೂಮಿ ಮೀಸಲಾತಿ ಮಾಡಲಾಗಿದೆ. ಈ ಯೋಜನೆಗಳು ಭವಿಷ್ಯದಲ್ಲಿ ಬೆಳ್ಳಾಯರು ಗ್ರಾಮದ ಸಮಗ್ರ ಅಭಿವೃದ್ಧಿಗೆ ಮಹತ್ವದ ಪೂರಕವಾಗಲಿವೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.
ಈ ಮಹತ್ವದ ಯೋಜನೆಗಳಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸ್ಪಂದಿಸಿದ ಮಾನ್ಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾನ್ಯ ಶಾಸಕ ಉಮಾನಾಥ್ ಕೋಟ್ಯಾನ್, ಹಾಗೂ ಸಹಕರಿಸಿದ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ವಿನೋದ್ ಎಸ್. ಸಾಲ್ಯಾನ್, ಬೆಳ್ಳಾಯರು, ಪಡುಪಣಂಬೂರು ಗ್ರಾಮ ಪಂಚಾಯತ್ ಸದಸ್ಯರು (ಬೆಳ್ಳಾಯರು 1ನೇ ವಾರ್ಡ್) ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.
