ಉಡುಪಿ: ಆರೋಗ್ಯ ಮತ್ತು ಶಿಕ್ಷಣ ಒಂದಕ್ಕೊಂದು ಪೂರಕ. ಉತ್ತಮ ಆರೋಗ್ಯ ಹೊಂದಿದ್ದಾಗ ಪಾಠಗಳ ಬಗ್ಗೆ ಆಸಕ್ತಿ ಹೆಚ್ಚಿ ಕಲಿತದ್ದು ನೆನಪಿನಲ್ಲಿ ಉಳಿಯುತ್ತದೆ. ಇದರಿಂದಾಗಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯನ್ನು ಸಾಧಿಸುತ್ತಾರೆ. ಜಂತು ಹುಳು ನಿವಾರಣೆ ಕಾರ್ಯಕ್ರಮವು ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹೊಂದಲು ಸರ್ಕಾರದ ವತಿಯಿಂದ ನಡೆಸಲಾಗುವ ಉಪಕ್ರಮವಾಗಿದ್ದು, ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ ಎಂದು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯ ಹಾಗೂ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಜಂತು ಹುಳು ನಿವಾರಣೆ ರಾಜ್ಯಾದ್ಯಂತ ಯಶಸ್ಸನ್ನು ಕಂಡಿದೆ. ಮಕ್ಕಳಲ್ಲಿ ಜಂತು ಹುಳುವಿನ ಬಾಧೆ ಗಣನೀಯವಾಗಿ ಕಡಿಮೆಯಾಗಿದ್ದು ಜಂತು ಹುಳು ನಿವಾರಣೆಯಲ್ಲಿ ಶೇ.90 ರಷ್ಟು ಪ್ರಗತಿ ಸಾಧಿಸಲಾಗಿದೆ. ಅಂಗನವಾಡಿಯ ಮಕ್ಕಳಿಂದ ಹಿಡಿದು ಪ್ರೌಢಶಾಲಾ ವಿಭಾಗದ ಮಕ್ಕಳವರೆಗೆ ಎಲ್ಲರಿಗೂ ಅಲ್ಬೆಂಡಜೋಲ್ ಮಾತ್ರೆಗಳನ್ನು ವರ್ಷಕ್ಕೆ ಎರಡು ಬಾರಿ ನೀಡಲಾಗುತ್ತಿದೆ. ಅಭಿಯಾನದ ದಿನದಂದು ತಪ್ಪಿ ಹೋದ ಮಕ್ಕಳಿಗೆ ಮನೆ ಭೇಟಿ ನೀಡುವ ಮೂಲಕ ಮಾತ್ರೆಗಳನ್ನು ತಲುಪಿಸಲಾಗುತ್ತಿದ್ದು, ಆಶಾ ಕಾರ್ಯಕರ್ತೆಯರು, ಆರೋಗ್ಯ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುತ್ತಿದ್ದಾರೆ. ಇವರೆಲ್ಲರ ಕಾರ್ಯ ಅಭಿನಂದನೀಯ ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ್ ಹುಬ್ಬಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಅಲ್ಬೆಂಡಜೋಲ್ ಮಾತ್ರೆಗಳನ್ನು ಸೇವಿಸಬಹುದು, ಇದರಿಂದ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ. ವಿಶೇಷವಾಗಿ ಹೆಣ್ಣು ಮಕ್ಕಳು ಈ ಮಾತ್ರೆಗಳನ್ನು ಸೇವಿಸುವುದರಿಂದ ಭವಿಷ್ಯದಲ್ಲಿ ವೈವಾಹಿಕ ಬದುಕಿನಲ್ಲಿ ಎದುರಾಗಬಹುದಾದ ಅಪೌಷ್ಠಿಕತೆ ಮತ್ತು ರಕ್ತಹೀನತೆಯಂತಹ ಆರೋಗ್ಯ ಸಮಸ್ಯೆಗಳಿಂದ ಮುಕ್ತರಾಗಬಹುದು. ವಿದ್ಯಾರ್ಥಿಗಳು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮನೆಯಲ್ಲಿ ಕುದಿಸಿ ಆರಿಸಿದ ನೀರನ್ನೇ ಕುಡಿಯಬೇಕು. ಆಹಾರ ಸೇವಿಸುವ ಮುನ್ನ ಕೈಗಳನ್ನು ತೊಳೆದುಕೊಳ್ಳುವ ಜೊತೆಗೆ ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಆರೋಗ್ಯವಂತರಾಗಬೇಕು. ಆರೋಗ್ಯ ಇಲ್ಲವಾದಲ್ಲಿ ಶಿಕ್ಷಣವೂ ಇರುವುದಿಲ್ಲ ಎಂದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಲೋಕೇಶ್ ಸಿ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು. ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದನ್ನು ರೂಢಿಸಿಕೊಳ್ಳಬೇಕು. ಜಂತುಹುಳು ನಿವಾರಣೆಗೆ ವರ್ಷದಲ್ಲಿ ಎರಡು ಬಾರಿ ಜಂತುಹುಳು ನಿವಾರಣಾ ಮಾತ್ರೆಗಳನ್ನು ತಪ್ಪದೇ ಸೇವಿಸಬೇಕೆಂದರು.
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಜೋತ್ಸಾö್ನ.ಬಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಂತು ಹುಳು ನಿವಾರಣೆ ಜಾಗೃತಿ ಕುರಿತು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯಿನಿ ಇಂದಿರಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿ, ಶಶಿಧರ್ ಹೆಚ್ ನಿರೂಪಿಸಿ, ಡಿಪಿಸಿ ಸುಧೀಂದ್ರ ವಂದಿಸಿದರು.

