ಉಡುಪಿ: ಜಿಲ್ಲಾ ಕೇಂದ್ರದಲ್ಲಿ ಪ್ರತ್ಯೇಕ ಕಂದಾಯ (ಎಸಿ ಕಚೇರಿ) ಉಪವಿಭಾಗ ಕಚೇರಿ ಸ್ಥಾಪಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿ’ಸೋಜಾ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸೋಮವಾರ ವಿಧಾನ ಪರಿಷತ್ನ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, 1997ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬೇರ್ಪಟ್ಟು ಉಡುಪಿ ನೂತನ ಜಿಲ್ಲೆಯಾಗಿ ರಚನೆಯಾಗಿದ್ದರೂ ಜಿಲ್ಲೆಯ ಏಳು ತಾಲೂಕುಗಳ ಪೈಕಿ ಕುಂದಾಪುರದಲ್ಲಿ ಮಾತ್ರ ಉಪವಿಭಾಗಾಧಿಕಾರಿ ಕಚೇರಿ ಕಾರ್ಯನಿರ್ವಹಿಸುತ್ತಿದೆ. ಇದರಿಂದಾಗಿ ಉಡುಪಿ ಸುತ್ತಮುತ್ತಲಿನ ಭಾಗದ ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗೂ ದೂರದ ಕುಂದಾಪುರಕ್ಕೆ ಅಲೆಯುವಂತಾಗಿದೆ. ಅರ್ಜಿಗಳ ವಿಲೇವಾರಿಯಲ್ಲಿ ವಿಪರೀತ ವಿಳಂಬವಾಗುತ್ತಿದೆ. ಕಳೆದ 2024, ಜುಲೈ 19ರಂದು ಜಿಲ್ಲಾಡಳಿತ ಸರ್ಕಾರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಐವಾನ್ ಡಿಸೋಜಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಡಳಿತಾತ್ಮಕ ಅನುಕೂಲಕ್ಕಾಗಿ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕಂದಾಯ ಸಚಿವರು ಕೂಡಲೇ ಈ ವಿಷಯದ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.

