ಇಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಎ.ಬಿ.ವಿ.ಪಿ. ವತಿಯಿಂದ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಮುಂದುವರಿದ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಅಧ್ಯಕ್ಷರಾದ ಮುಳಿಯ ಸಾತ್ವಿಕ್, ನಗರ ಕಾರ್ಯದರ್ಶಿ ಪುನೀತ್ ಎಚ್, ಹೋರಾಟ ಪ್ರಮುಖ್ ಕೀರ್ತನ್, ಶ್ರೀಶರಣ್ ಮೊಗ್ರ ಹಾಗೂ ಅಮಿತ್ ನಾಯಕ್ ಉಪಸ್ಥಿತರಿದ್ದರು.
ಇತ್ತೀಚೆಗೆ ಸುಳ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯ ಮುಂದುವರಿದ ಭಾಗವಾಗಿ ಈ ಮನವಿಯನ್ನು ಸಲ್ಲಿಸಲಾಗಿದ್ದು, ಬಸ್ಗಳ ಅನಿಯಮಿತ ಸಂಚಾರ, ಸಮಯಪಾಲನೆಯ ಕೊರತೆ ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಂಪರ್ಕ ವ್ಯವಸ್ಥೆಯ ಕೊರತೆಯ ಬಗ್ಗೆ ಗಮನ ಸೆಳೆಯಲಾಯಿತು. ಈ ಸಮಸ್ಯೆಗಳು ವಿದ್ಯಾರ್ಥಿಗಳ ದಿನನಿತ್ಯದ ಶಿಕ್ಷಣ ಹಾಗೂ ಭದ್ರತೆಯನ್ನು ಗಂಭೀರವಾಗಿ ಪರಿಣಾಮಗೊಳಿಸುತ್ತಿವೆ ಎಂದು ಎ.ಬಿ.ವಿ.ಪಿ. ಮುಖಂಡರು ತಿಳಿಸಿದರು.
ಈ ಸಂದರ್ಭದಲ್ಲಿ ಎ.ಬಿ.ವಿ.ಪಿ. ನಾಯಕರು, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತ್ವರಿತ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವಂತೆ ಶಾಸಕರಿಗೆ ಮನವಿ ಮಾಡಿದರು. ವಿದ್ಯಾರ್ಥಿಗಳ ಹಿತಕ್ಕಾಗಿ ಹೋರಾಟ ನಿರಂತರವಾಗಿದ್ದು, ಬೇಡಿಕೆಗಳು ಈಡೇರಿಸುವವರೆಗೆ ಎ.ಬಿ.ವಿ.ಪಿ. ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ತಿಳಿಸಿದರು.

