ಸೂಟ್‌ಕೇಸ್‌ನಲ್ಲಿ ಶವ ಎಸೆದಿದ್ದ ಆರೋಪಿ ಅರೆಸ್ಟ್

0
115

ಬೆಂಗಳೂರು : ನಗರದ ಕೆಂಗೇರಿ ಸಮೀಪದ ರಾಮೋಹಳ್ಳಿಯ ತಿಮ್ಮಪ್ಪ ಕೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿದ್ದಾರೆ. ಪ್ರಕರಣ ಸಂಬಂಧ 21 ವರ್ಷದ ಯುವಕನನ್ನು ಬಂಧಿಸಲಾಗಿದ್ದು, ಚಿನ್ನಾಭರಣ ದೋಚುವ ಉದ್ದೇಶದಿಂದ ಮಹಿಳೆಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಮೃತರನ್ನು ಕೆಂಗೇರಿ ಸಮೀಪದ ಚಲ್ಲಘಟ್ಟ ನಿವಾಸಿ 61 ವರ್ಷದ ಜಯಮ್ಮ ಎಂದು ಗುರುತಿಸಲಾಗಿದೆ. ಅವರು ನಾಪತ್ತೆಯಾಗಿದ್ದ ಬಗ್ಗೆ ಕುಟುಂಬದವರು ದೂರು ದಾಖಲಿಸಿದ್ದರು. ಜುಲೈ 21ರಂದು ರಾಮೋಹಳ್ಳಿಯ ತಿಮ್ಮಪ್ಪ ಕೆರೆಯಲ್ಲಿ ಕೆಂಪು ಬಣ್ಣದ ಸೂಟ್‌ಕೇಸ್‌ನಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಕುಂಬಳಗೋಡು ಪೊಲೀಸರು, ಚಲ್ಲಘಟ್ಟ ನಿವಾಸಿ 21 ವರ್ಷದ ಗಗನ್ ಆರ್. ಎಂಬಾತನನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ಜಯಮ್ಮ ಅವರ ಚಿನ್ನದ ಸರ ಹಾಗೂ ಕಿವಿಯೋಲೆಗಳನ್ನು ದೋಚುವ ಉದ್ದೇಶದಿಂದ ಆರೋಪಿ ಕೊಲೆ ನಡೆಸಿರುವುದು ಬೆಳಕಿಗೆ ಬಂದಿದೆ.

ತನಿಖೆ ವೇಳೆ ಆರೋಪಿ, ಮಹಿಳೆಯ ಮೃತದೇಹವನ್ನು ಮನೆಯಲ್ಲಿದ್ದ ಸೂಟ್‌ಕೇಸ್‌ನಲ್ಲಿ ಹಾಕಿ, ನಂತರ ಅದನ್ನು ತಿಮ್ಮಪ್ಪ ಕೆರೆಗೆ ಎಸೆದು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶೇಷ ತನಿಖಾ ತಂಡ ಸಿಸಿಟಿವಿ ದೃಶ್ಯಗಳು, ತಾಂತ್ರಿಕ ಮಾಹಿತಿ ಹಾಗೂ ಇತರೆ ವೈಜ್ಞಾನಿಕ ಸಾಕ್ಷ್ಯಗಳ ಆಧಾರದಲ್ಲಿ ಕೇವಲ 24 ಗಂಟೆಯೊಳಗೆ ಪ್ರಕರಣವನ್ನು ಭೇದಿಸಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.