ಮೂಡುಬಿದಿರೆ: ಇಲ್ಲಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಂದು ಹೇಳಲಾಗುತ್ತಿರುವ ಆಳ್ವಾಸ್ ಕಾಲೇಜಿನ ಉಪನ್ಯಾಸಕರುಗಳಾದ ನರೇಂದ್ರ, ಸಂದೀಪ್, ಹಾಗೂ ಅವರ ಸ್ನೇಹಿತ ಅನೂಪ್ ಬೆಂಗಳೂರಿನ ಮಾರತಹಳ್ಳಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಿಂದ ಬುಧವಾರ ಮೂಡುಬಿದಿರೆ ಬಸ್ಸು ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.
ಆರೋಪಿಗಳು ಈಗಾಗಲೇ ಬಂಧಿತರಾಗಿದ್ದರೂ, ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ತಹಶಿಲ್ದಾರ್ ಶ್ರೀಧರ್ ಮುಂದಲಮನಿ ಅವರಿಗೆ ಮನವಿ ಸಲ್ಲಿಸಿದರು.
ತಹಶಿಲ್ದಾರ್ ಮನವಿಗೆ ಸ್ಪಂದಿಸಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಚೌಕಟ್ಟಿನಲ್ಲಿರುವಂತೆ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗುವುದು. ಹಾಗೂ ಎಲ್ಲಾ ಶಾಲಾ-ಕಾಲೇಜುಗಳಿಗೆ ಈ ಬಗ್ಗೆ ನೋಟೀಸ್ ನೀಡಲಾಗುವುದು ಎಂದರು.
ಎಬಿವಿಪಿ ಜಿಲ್ಲಾ ಸಂಚಾಲಕ ಶ್ರೀಜಿತ್ ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಎಬಿವಿಪಿ ಮಂಗಳೂರು ಮಹಾನಗರದ ಕಾರ್ಯದರ್ಶಿ ಭುವನೇಶ್ ತೂಮಿನಾಡು, ಸಹಕಾರ್ಯದರ್ಶಿ ಶಶಾಂಕ್ , ಎಬಿವಿಪಿ ಉಡುಪಿ ಜಿಲ್ಲಾ ಸಂಚಾಲಕ ಶ್ರೇಯಸ್ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.

