ವಿಜಯಪುರ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯೂ ಒಂದು. ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಬಡವರಿಗೆ ಸರ್ಕಾರ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಆದರೆ ಈ ಅನ್ನಭಾಗ್ಯ ಅಕ್ಕಿ ಬಡವರ ಬದಲಾಗಿ ಉಳ್ಳವರ ಪಾಲಾಗಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿರುವುದು ವಿಜಯಪುರದಲ್ಲಿ ಪತ್ತೆಯಾಗಿದೆ. ವಿಜಯಪುರ ನಗರದ ಹೊರ ಭಾಗದ ಎನ್ಎಚ್ 50 ರಲ್ಲಿ ಆಹಾರ ಮತ್ತು ನಾಗರೀಕ ಇಲಾಖೆ ಆಧಿಕಾರಿಗಳು ದಾಳಿ ನಡೆಸಿ ಸುಮಾರು 40 ಟನ್ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ನೆರೆಯ ಬಾಗಲಕೋಟೆ ಜಿಲ್ಲೆಯಿಂದ ವಿಜಯಪುರ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತಿತ್ತು. 600 ಕ್ಕೂ ಅಧಿಕ ಪ್ಲಾಸ್ಟಿಕ್ ಮೂಟೆಗಳಲ್ಲಿ ಸಂಗ್ರಹಿಸಿ, ಲೋಡ್ ಮಾಡಿ ತಮಿಳುನಾಡು ರಾಜ್ಯದ ನೋಂದಣಿಯ ಲಾರಿಯಲ್ಲಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟದ ವೇಳೆ ಆಹಾರ ಮತ್ತು ನಾಗರೀಕ ಇಲಾಖೆಯ ಮ್ಯಾನೇಜರ್ ಅಮರೇಶ ತಾಂಡೂರ ಹಾಗೂ ಆಹಾರ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಲಾರಿ ತಡೆಯುತ್ತಲೇ ಚಾಲಕ ಹಾಗೂ ಕ್ಲೀನರ್ ಲಾರಿ ಬಿಟ್ಟು ಓಡಿ ಹೋಗಿದ್ದಾರೆ. ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಶಿವಮೊಗ್ಗದ ಸಾಗರ ಭಾಗದಲ್ಲಿ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಲಾಗಿದೆ ಎಂಬ ಸಂಶಯ ಆಧಿಕಾರಿಗಳಲ್ಲಿ ಮೂಡಿದೆ.