ಶಿವಮೊಗ್ಗ ಲೋಕಸಭಾ ಸಂಸದರಾದ ಬಿ.ವೈ ರಾಘವೇಂದ್ರವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಇವರನ್ನು ಭೇಟಿಯಾಗಿ ಈ ಕೆಳಕಂಡ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಕೋರಿ ಮನವಿಯನ್ನು ಸಲ್ಲಿಸಿದರು.
ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಯ ಮೂಲಕ ರಾಜ್ಯದ ಅಡಿಕೆ ಕೃಷಿ ಬೆಳೆಗಾರ ರೈತ ಸಮುದಾಯವು ಕೃಷಿ ಇಲಾಖೆಗಳ ನಡುವೆ ಸೇತುವೆಯಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಾಯೋಜಿತ ಯೋಜನೆಯಡಿಯಲ್ಲಿ ರೈತರುಗಳು ಈಗಾಗಲೇ ಮಂಜೂರಾದ ಕೃಷಿ ಸಂಸ್ಕರಣಾ ಘಟಕಕ್ಕೆ 50% ಸಬ್ಸಿಡಿ ಹಣವನ್ನು ಪಡೆದುಕೊಂಡಿದ್ದು, ಬಾಕಿ ಇರುವ ನಬಾರ್ಡ್ ಸಬ್ಸಿಡಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಕೋರಿದರು
- ಕೊಲ್ಲೂರು ಮೂಕಾಂಬಿಕ ದೇವಸ್ಥಾನವನ್ನು ಪ್ರಸಾದ್ ಯೋಜನೆಯಡಿ ಅಭಿವೃದ್ಧಿಪಡಿಸುವುದು.
- ಆದಿ ಶಂಕರಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪೂಜ್ಯ ಕೊಲ್ಲೂರು ಮೂಕಾಂಬಿಕಾ ದೇವಾಲಯವು ದಕ್ಷಿಣ ಭಾರತದ ಆಧ್ಯಾತ್ಮಿಕ ಕ್ಷೇತ್ರದ ಮೂಲಾಧಾರವಾಗಿದೆ. ಧಾರ್ಮಿಕ ಮಹತ್ವದ ಜೊತೆಗೆ, ಸುತ್ತಮುತ್ತಲಿನ ಪ್ರದೇಶವು ನೈಸರ್ಗಿಕ ಆಸ್ತಿಗಳಾದ ನದಿಗಳು, ಕಡಲ ತೀರಗಳು, ಗಿರಿಧಾಮಗಳು, ಹಿನ್ನೀರು ಮತ್ತು ಮುಂಬರುವ ವಾಯುನೆಲೆಗಳ ಗಮನಾರ್ಹ ಮಿಶ್ರಣವನ್ನು ನೀಡುವುದರ ಜೊತೆಗೆ ಇವೆಲ್ಲವೂ 50 ಕಿಲೋಮೀಟರ್ ವ್ಯಾಪ್ತಿಯಲ್ಲಿದ್ದು, ಭೌಗೋಳಿಕತೆ ಮತ್ತು ಆಧ್ಯಾತ್ಮಿಕತೆಯ ಸಮಗ್ರ ದೃಷ್ಟಿಯಿಂದ ಪ್ರವಾಸೋದ್ಯಮದ ಅಭಿವೃದ್ಧಿಗೆ ಉತ್ತಮ ಅವಕಾಶವನ್ನು ಒದಗಿಸುವುದರಿಂದ, ಕೊಲ್ಲೂರು ಮೂಕಾಂಬಿಕ ದೇವಸ್ಥಾನವನ್ನು ಪ್ರವಾಸೋದ್ಯಮ ಸಚಿವಾಲಯದ ತೀರ್ಥಯಾತ್ರೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರಸಾದ್ ಯೋಜನೆಯಡಿ ಮಾನ್ಯ ಪ್ರವಾಸೋದ್ಯಮ ಸಚಿವರಿಗೆ ಈ ಕ್ಷೇತ್ರದ ಬಗ್ಗೆ ಮನವರಿಕೆ ಮಾಡುವುದರ ಮೂಲಕ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಯಿತು.
- ಸಿ.ಜಿ.ಹೆಚ್.ಎಸ್ ಆಸ್ಪತ್ರೆ ಕಾರ್ಯಾರಂಭಕ್ಕೆ ಸೂಕ್ತ ಅನುದಾನ ಮತ್ತು ಸಿಬ್ಬಂದಿ ನೇಮಕ್ಕೆ ಮನವಿ.
ಕರ್ನಾಟಕ ರಾಜ್ಯದ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಅವರ ಕುಟುಂಬಗಳು CGHS ಕ್ಷೇಮ ಕೇಂದ್ರವನ್ನು ಪ್ರಾರಂಭಿಸುವಂತೆ ಸಾಕಷ್ಟು ಮನವಿಯಗಳನ್ನು ಸಲ್ಲಿಸಿದ್ದರು. ಈ ಕುರಿತಂತೆ CGHS ಕ್ಷೇಮ ಕೇಂದ್ರವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ತೆರೆಯುವಂತೆ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರರವರು ಕೇಂದ್ರ ಸರ್ಕಾರದ ಮೇಲೆ ನಿರಂತರವಾಗಿ ಒತ್ತಡವನ್ನು ಹೇರಿದ್ದರು. ಅದರ ಫಲವಾಗಿ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕರ್ನಾಟಕದ ಶಿವಮೊಗ್ಗ, ಮಂಗಳೂರು ಉಡುಪಿ ಜಿಲ್ಲೆಯಲ್ಲಿ CGHS ಕ್ಷೇಮ ಕೇಂದ್ರಗಳ ಸ್ಥಾಪನೆಗೆ ಅನುಮೋದನೆ ನೀಡಿರುತ್ತದೆ. ಪ್ರಯುಕ್ತ ಶಿವಮೊಗ್ಗ, ಮಂಗಳೂರು, ಮತ್ತು ಉಡುಪಿ ಜಿಲ್ಲೆಯ CGHS ಕ್ಷೇಮ ಕೇಂದ್ರಗಳನ್ನು ತೆರೆಯಲು ಅಗತ್ಯ ಹುದ್ದೆಗಳ ಮಂಜೂರಾತಿ ಮತ್ತು ಸೂಕ್ತ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಯಿತು.
ಶ್ರೀಮತಿ ನಿರ್ಮಲ ಸೀತಾರಾಮನ್ ಪ್ರತಿಯೊಂದು ವಿಷಯಗಳ ಬಗ್ಗೆ ಸೂಕ್ತ ವಿವರಣೆಯನ್ನು ಪಡೆದು, ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಅನುದಾನವನ್ನು ನೀಡುವುದಾಗಿ ಭರವಸೆಯನ್ನು ನೀಡಿದರು.
ಕೃಷಿ, ಆರೋಗ್ಯ ಮತ್ತು ಪ್ರವಾಸೋದ್ಯಮ ಕ್ಷೇತ್ರಕ್ಕೆ ಸೌಲಭ್ಯಗಳನ್ನು ನೀಡಲು ಒಪ್ಪಿದ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದೀಜಿಯವರಿಗೆ, ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರಿಗೆ, ಆರೋಗ್ಯ ಸಚಿವರಾದ ಶ್ರೀ ಜೆ.ಪಿ ನಡ್ಡಾ ಅವರಿಗೆ, ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.