
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ. ಇನ್ನು ಈ ದುರಂತದಲ್ಲಿ ಅರಸು ಕುಟುಂಬ ದುರಂತ ಅಂತ್ಯ ಕಂಡಿದೆ.
ಕಾರು ಮೈಸೂರು ಕಡೆಗೆ ಹೊರಟಿತ್ತು. ಈ ವೇಳೆ ಎಕ್ಸ್ಪ್ರೆಸ್ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಉಂಟಾಗಿದ್ದು, ಮತ್ತೆ ಕಾರನ್ನು ಎಕ್ಸ್ಪ್ರೆಸ್ ವೇಗೆ ತಿರುಗಿಸಿದ್ದಾನೆ. ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಕೆಎಸ್ಆರ್ಟಿಸಿ ಐರಾವತ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ.
ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರಿನ ಜೆಪಿ ನಗರದವರು ಎಂದು ಗುರುತಿಸಲಾಗಿದ್ದು, ಬಸ್ ಗುದ್ದಿದ ರಭಸಕ್ಕೆ ಟಾಟಾ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇನ್ನು ಹೆದ್ದಾರಿ ಟ್ರಾಫಿಕ್ ಉಂಟಾಗಿದ್ದು, ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ದಕ್ಷಿಣ ವಯಲ ಡಿಐಜಿಪಿ ಡಾ.ಎಂ.ಬಿ.ಬೋರಲಿಂಗಯ್ಯ ಹಾಗೂ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜೆ.ಪಿ.ನಗರದ ಸತ್ಯಾನಂದ ರಾಜೇ ಅರಸ್(51), ಪತ್ನಿ ನಿಶ್ಚಿತಾ(45), ಚಂದ್ರು(62), ಪತ್ನಿ ಸುವೇದಿನಿ ರಾಣಿ(50) ಮೃತ ದುರ್ದೈವಿಗಳು. ಇನ್ನು ಮೃತಪಟ್ಟರು ಬೆಂಗಳೂರಿನ ಜೆ.ಪಿ.ನಗರದ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ದಕ್ಷಿಣ ವಲಯ ಐಜಿ ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಪಿರಿಯಾಪಟ್ಟಣ ತಾಲೂಕಿನ ಸಿಗೂರು ಗ್ರಾಮದಲ್ಲಿ ಸತ್ಯಾನಂದರಾಜೇ ಅರಸ್ ಅವರ ಮಾವ ತೀರಿ ಹೋಗಿದ್ದರು. ಹೀಗಾಗಿ ಅಂತ್ಯಕ್ರಿಯೆಗೆಂದು ಅರಸ್ ಕುಟುಂಬ ಕಾರಿನಲ್ಲಿ ಬೆಂಗಳೂರಿನಿಂದ ಪಿರಿಯಾಪಟ್ಟಣ ತಾಲೂಕಿನ ಸಿಗೂರು ಗ್ರಾಮಕ್ಕೆ ಹೋಗುತ್ತಿದ್ದರು. ಈ ದುರ್ಘಟನೆ ಸಂಭವಿಸಿದೆ. ಇನ್ನು ಕ್ರೇನ್ ಮೂಲಕ ಕಾರನ್ನು ಸೈಡಿಗೆ ಸರಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.
KA 57, F 1721 ನಂಬರಿನ ಸಂಖ್ಯೆಯ ಐರಾತ ಬಸ್, KA 09 MG 4263 ಟಾಟಾ ಪಂಚ್ ಕಾರಿಗೆ ಗುದ್ದಿದೆ. ವೇಗವಾಗಿ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಕಾರಿನಲ್ಲೇ ಉಸಿರು ಚೆಲ್ಲಿದ್ದಾರೆ. ಇನ್ನು ಕಾರು ನೋಡದ ಸ್ಥಿತಿಯಲ್ಲಿದೆ. ಇನ್ನು ಬಸ್ಗೆ ಮುಂಭಾಗ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿದೆ ಅಷ್ಟೇ.
ಮೃತ ಸತ್ಯಾನಂದರಾಜೇ ಅರಸ್ ಹಾಗೂ ಚಂದ್ರರಾಜೇ ಅರಸ್ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಚಂದ್ರರಾಜೇ ಅರಸ್ ಪತ್ನಿ ಸುವೇದಿನಿ ರಾಣಿ, ಸಹೋದರ ಸತ್ಯಾನಂದರಾಜೇ ಅರಸ್, ಪತ್ನಿ ನಿಶ್ಚಿತಾ ತೆರಳುತ್ತಿದ್ದರು. ಚಂದ್ರರಾಜೇ ಅರಸ್ ಕಾರು ಚಾಲನೆ ಮಾಡುತ್ತಿದ್ದರು. ಸತ್ಯಾನಂದರಾಜೇ ಅರಸ್ ಎಲೆಕ್ಟ್ರಿಕ್ ಕಂಟ್ರ್ಯಾಕ್ಟರ್ ಆಗಿದ್ದರೆ, ಚಂದ್ರರಾಜೇ ಅರಸ್ ನಿವೃತ್ತ ಜೆಇ. ಸದ್ಯ ಮೃತದೇಹಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.