ತೆಲಂಗಾಣ : ಕ್ಷುಲ್ಲಕ ವಿಚಾರಕ್ಕೆ ದಂಪತಿಗಳ ನಡುವೆ ನಡೆದ ಜಗಳ ಭೀಕರ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಮಾಂಸದ ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಪತ್ನಿಯೇ ಪತಿಯನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.
ಮೃತರನ್ನು ಶಿವಾಜಿ ಎಂದು ಗುರುತಿಸಲಾಗಿದ್ದು, ಅವರು ಪತ್ನಿ ಲಕ್ಷ್ಮಿ ಮತ್ತು ಇಬ್ಬರು ಪುಟ್ಟ ಹೆಣ್ಣುಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಕಳೆದ ಕೆಲವು ತಿಂಗಳುಗಳಿಂದ ಕುಟುಂಬವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಇದರಿಂದ ದಂಪತಿಗಳ ನಡುವೆ ಪದೇಪದೇ ಜಗಳವಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ದಿನ ರಾತ್ರಿ ಮಾಂಸದ ಅಡುಗೆ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕೋಪೋದ್ರಿಕ್ತಳಾದ ಲಕ್ಷ್ಮಿ ಮನೆಯಲ್ಲಿದ್ದ ಮಚ್ಚಿನಿಂದ ಪತಿ ಶಿವಾಜಿಯ ಕುತ್ತಿಗೆಗೆ ಹೊಡೆದಿದ್ದಾಳೆ. ಪರಿಣಾಮವಾಗಿ ಶಿವಾಜಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯ ಬಗ್ಗೆ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಲಕ್ಷ್ಮಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರ್ಥಿಕ ಸಮಸ್ಯೆಗಳೇ ಈ ಕೃತ್ಯಕ್ಕೆ ಕಾರಣವಾಗಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

