ಕಲಾ ತರಬೇತಿ ಶಿಬಿರ ಸಮಾರೋಪ

0
7

ಶೋಷಿತ ಸಮಾಜದ ಪ್ರತಿಭೆಗಳಿಗೆ ಸರಕಾರ, ಸಮಾಜದ ಪ್ರೋತ್ಸಾಹ ಅಗತ್ಯ : ಡಾ. ನಿ. ಬೀ. ವಿಜಯ ಬಲ್ಲಾಳ್

ಉಡುಪಿ : ಪ್ರತಿಭೆಗೆ ಯಾವುದೇ ತಾರತಮ್ಯವಿಲ್ಲ. ಕಡು ಬಡವನಲ್ಲೂ ಪ್ರತಿಭೆ ಇರುತ್ತದೆ. ಸಮಾಜದ ಶೋಷಿತ ವರ್ಗಗಳ ಪ್ರತಿಭೆಗಳಿಗೆ ಸರಕಾರ, ಇಲಾಖೆ ಹಾಗೂ ಸಮಾಜದ ಪ್ರೋತ್ಸಾಹ ಅತೀ ಅಗತ್ಯ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ. ಬೀ ವಿಜಯ ಬಲ್ಲಾಳ್ ಹೇಳಿದರು.

ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಹಮ್ಮಿಕೊಂಡ ಕಲಾ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಶೋಷಿತ ವರ್ಗಗಳಲ್ಲಿ ಇಂದು ವೈದ್ಯರು, ಇಂಜೀನಿಯರ್ ಸೇರಿದಂತೆ ಉನ್ನತ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಈ ಮೂಲಕ ಅಂಬೇಡ್ಕರ್ ಅವರ ಕನಸು ನನಸಾಗುತ್ತಿದೆ ಎಂದ ಅವರು, ಭಾರತೀಯ ಜಾನಪದ, ಸಾಂಸ್ಕೃತಿಕ ಕಲೆಗಳು ಅತ್ಯಂತ ಪ್ರಭಾವಶಾಲಿಯಾಗಿವೆ. ಈ ಪ್ರತಿಭೆಗಳಿಗೆ ಸೂಕ್ತ ಪ್ರೋತ್ಸಾಹ ಹಾಗೂ ವೇದಿಕೆ ನೀಡಬೇಕು ಎಂದು ಅಭಿಪ್ರಾಯ ಪಟ್ಟರು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಮಾತನಾಡಿ, ಕರಾವಳಿ ಜಿಲ್ಲೆಗಳ ಜಾನಪದ ಕಲೆಗಳು ಅತ್ಯಂತ ವೈಶಿಷ್ಟ್ಯಪೂರ್ಣವಾಗಿವೆ. ಅದರಲ್ಲೂ ಕೊರಗ ಸಮಾಜ ಅತೀ ಹಿಂದುಳಿದಿದ್ದು, ಅವರ ಸಂಪ್ರದಾಯಗಳು, ಜಾನಪದ ಕಲೆಗಳ ಬಗ್ಗೆ ಹೊರ ಜಗತ್ತಿಗೆ ತಿಳಿದಿರುವುದು ಅತ್ಯಲ್ಪ. ಈ ನಿಟ್ಟಿನಲ್ಲಿ ಅವರ ಜಾನಪದ ಕಲೆಗಳ ಬಗ್ಗೆ ತರಬೇತಿ ನೀಡಿ ಯುವ ಪೀಳಿಗೆಗೆ ದಾಟಿಸುವ ಮಹಾತ್ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವುದು ಅಭಿನಂದನೀಯ. ಇದರಿಂದ ನಶಿಸುತ್ತಿರುವ ಕೊರಗ ಸಮುದಾಯದ ಜಾನಪದ ಕಲೆಗಳನ್ನು ಉಳಿಸಿದಂತೆಯೂ ಆಗುತ್ತದೆ ಎಂದರು.

ಡಾ. ಶಿವರಾಮ ಕಾರಂತ ಟ್ರಸ್ಟ್ನ ಉಡುಪಿ ಜಿಲ್ಲಾ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಮಾತನಾಡಿ, ತರಬೇತಿ ನಮ್ಮ ವ್ಯಕ್ತಿತ್ವವನ್ನು ಬೆಳೆಸುತ್ತದೆ. ಜಾನಪದ ಕಲೆ ಅಂದರೆ ಬರೀ ಕುಣಿಯುವುದಲ್ಲ, ಇದು ನಮ್ಮ ವ್ಯಕ್ತಿತ್ವವನ್ನು ಬದಲಾಯಿಸಬಲ್ಲದು. ಕಲೆ ನಮ್ಮ ಸಂಸ್ಕೃತಿಯನ್ನು ಕಲಿಸುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕ ಮಾತುಗಳನ್ನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿನಿಯರಿಗೆ ಕಲಾ ತರಬೇತಿ ನೀಡಲು ಜಿಲ್ಲೆಯ 2 ಹಾಸ್ಟೇಲುಗಳ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಕಳೆದ ಜುಲೈ ತಿಂಗಳಿoದ ತರಬೇತಿ ನೀಡಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ ಕಲಾಗುರುಗಳಾದ ರಮೇಶ್ ಕಲ್ಮಾಡಿ ಹಾಗೂ ಗಣೇಶ್ ಬಾರ್ಕೂರು ಅವರನ್ನು ಗೌರವಿಸಲಾಯಿತು.

ತರಬೇತಿಯಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು. ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ನಾರಾಯಣ ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕಿ ವಿಜಯಲಕ್ಷ್ಮಿ ದಿನ್ನಿ, ಕೊರಗ ಸಮಾಜದ ಮುಖಂಡ ಗಣೇಶ್ ಕೊರಗ ಉಪಸ್ಥಿತರಿದ್ದರು. ಉಪನ್ಯಾಸಕ ರಾಮಾಂಜಿ ನಮ್ಮಭೂಮಿ ಕಾರ್ಯಕ್ರಮ ನಿರೂಪಿಸಿದರು. ಬನ್ನಂಜೆ ವಸತಿಶಾಲೆಯ ಮೇಲ್ವಿಚಾರಕಿ ಸುಚಿತ್ರಾ ವಂದಿಸಿದರು.ಕಾರ್ಯಕ್ರಮದಲ್ಲಿ ಕಲಾ ತರಬೇತಿ ಪಡೆದ ವಿದ್ಯಾರ್ಥಿನಿಯರಿಂದ ಉತ್ತರ ಕನ್ನಡದ ಹಾಲಕ್ಕಿ ಕುಣಿತ, ಕೋಲಾಟ, ಕೊರಗ ಸಮುದಾಯದ ಡೊಳ್ಳು ಕುಣಿತ, ಕಂಗೀಲು ನೃತ್ಯ ಸಭಿಕರ ಮನಸೂರೆಗೊಂಡವು.

LEAVE A REPLY

Please enter your comment!
Please enter your name here