ಕಟೀಲ್ : 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಅಮೆರಿಕ ಸಂಯುಕ್ತ ಸಂಸ್ಥಾನ (USA) ಅಧ್ಯಕ್ಷರಾಗಿ ಖ್ಯಾತ ತಂತ್ರಜ್ಞ, ಸಮಾಜಸೇವಕ ಹಾಗೂ ತುಳು ಭಾಷೆ-ಸಂಸ್ಕೃತಿಯ ಅಭಿಮಾನಿ ಭಾಸ್ಕರ್ ಶೆರಿಗಾರ್ ಅವರನ್ನು ನೇಮಕ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಾಳ ಗ್ರಾಮದವರಾದ ಭಾಸ್ಕರ್ ಶೆರಿಗಾರ್ ಅವರು 2008ರಿಂದ ಅಮೆರಿಕದ ಬೋಸ್ಟನ್ ನಲ್ಲಿ ನೆಲೆಸಿದ್ದು, ಡಿಜಿಟಲ್ ವೀಡಿಯೊ ತಂತ್ರಜ್ಞಾನ ಹಾಗೂ VLSI-IC ವಿನ್ಯಾಸ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅವರ ಹೆಸರಿನಲ್ಲಿ 7 ಅಮೆರಿಕನ್ ಪೇಟೆಂಟ್ಗಳು ಮಂಜೂರಾಗಿದ್ದು, 11 ಪೇಟೆಂಟ್ ಅರ್ಜಿಗಳು ಪ್ರಗತಿಯಲ್ಲಿವೆ. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಹಲವಾರು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿರುವ ಅವರು, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿಯೂ ವಿಶಿಷ್ಟ ಗುರುತನ್ನು ಮೂಡಿಸಿದ್ದಾರೆ.
ಅವರು ಆಲ್ ಅಮೆರಿಕಾ ತುಳು ಅಸೋಸಿಯೇಷನ್ (AATA) ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿದ್ದು, ನ್ಯೂ ಇಂಗ್ಲೆಂಡ್ ತುಳು ಕೂಟ (NETK) ಅಧ್ಯಕ್ಷರಾಗಿ ಎರಡು ಅವಧಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ತುಳು ಭಾಷೆ, ತುಳು ಲಿಪಿ, ಸಾಹಿತ್ಯ, ಯಕ್ಷಗಾನ ಹಾಗೂ ತುಳುನಾಡಿನ ಸಂಸ್ಕೃತಿಯ ಸಂರಕ್ಷಣೆ ಮತ್ತು ಪ್ರಚಾರಕ್ಕಾಗಿ ವಿಶ್ವದಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ, ತುಳು ಲಿಪಿ ಕಲಿಕಾ ತರಗತಿಗಳನ್ನು ನಡೆಸುವುದರ ಜೊತೆಗೆ ಮೊದಲ ತುಳು ಲಿಪಿ ಪುಸ್ತಕದ ಪ್ರಕಟಣೆಯಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ.
ಅವರ ಸಮಾಜಸೇವೆ, ಸಂಘಟನಾ ಸಾಮರ್ಥ್ಯ ಹಾಗೂ ತುಳು ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಅಚಲ ಬದ್ಧತೆಯನ್ನು ಪರಿಗಣಿಸಿ, ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಅಂತರರಾಷ್ಟ್ರೀಯ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ ಅವರು ಭಾಸ್ಕರ್ ಶೆರಿಗಾರ್ ಅವರನ್ನು ಅಮೆರಿಕ ಸಂಯುಕ್ತ ಸಂಸ್ಥಾನ (USA) ತುಳುವ ಮಹಾಸಭೆಯ ಅಧ್ಯಕ್ಷರಾಗಿ ನೇಮಕಗೊಳಿಸಿದ್ದಾರೆ.
2028ರ ಶತಮಾನೋತ್ಸವದ ಅಂಗವಾಗಿ ಅಮೆರಿಕದಾದ್ಯಂತ ತುಳುವ ಮಹಾಸಭೆಯ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಪ್ರಚಾರ, ಯುವಜನರನ್ನು ಸಂಘಟಿಸುವುದು ಹಾಗೂ ಅಮೆರಿಕದ ವಿವಿಧ ರಾಜ್ಯಗಳಲ್ಲಿ ತುಳುವ ಮಹಾಸಭೆಯ ಘಟಕಗಳನ್ನು ಸ್ಥಾಪಿಸಿ ವಿಸ್ತರಿಸುವ ಜವಾಬ್ದಾರಿಯನ್ನು ಅವರು ವಹಿಸಲಿದ್ದಾರೆ.
ಈ ನೇಮಕವನ್ನು ತುಳುವರ್ಲ್ಡ್ ಫೌಂಡೇಶನ್ನ ಗೌರವಾಧ್ಯಕ್ಷ ಶ್ರೀಹರಿನಾರಾಯಣ ದಾಸ ಅಸ್ರಣ್ಣ, ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಕಾರ್ಯದರ್ಶಿ ವಸಂತ ರೈ ಕುತ್ತೇತ್ತೂರು, ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ ಹಾಗೂ ತುಳುವ ಮಹಾಸಭೆ ಕರ್ನಾಟಕ ರಾಜ್ಯ ಅಧ್ಯಕ್ಷ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ಅವರು ಹರ್ಷದಿಂದ ಸ್ವಾಗತಿಸಿ, ಭಾಸ್ಕರ್ ಶೆರಿಗಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅವರ ನಾಯಕತ್ವದಲ್ಲಿ ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ತುಳುವ ಮಹಾಸಭೆಯ ಸಂಘಟನೆ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿ ಹಾಗೂ ವಿಶ್ವದ ತುಳುವರನ್ನು ಒಗ್ಗೂಡಿಸುವ ಕಾರ್ಯಕ್ಕೆ ಹೊಸ ಚೈತನ್ಯ ದೊರಕಲಿ ಎಂದು ಶುಭ ಹಾರೈಸಿದ್ದಾರೆ.

