ಮಡಿಕೇರಿ: ಬಿಜೆಪಿ ಕಾರ್ಯಕರ್ತನೊಬ್ಬ ಅಪಘಾತಕ್ಕೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಕೊಡಗಿನ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಿಜೆಪಿ ಕಾರ್ಯಕರ್ತನ ಸಾವಿನ ಹಿನ್ನೆಲೆಯಲ್ಲಿ ಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದುದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಿದ್ಧಾಪುರ ನಗರ, ವಾಲ್ನೂರು ಗ್ರಾಮ, ಅರೆಕಾಡು ಗ್ರಾಮ, ನೆಲ್ಲಿಹುದಿಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಷೇಧಾಜ್ಞೆ ತಕ್ಷಣದಿಂದ ಜಾರಿಗೊಂಡಿದ್ದು, ಶುಕ್ರವಾರ ರಾತ್ರಿ ಹತ್ತು ಗಂಟೆ ವರೆಗೂ ಈ ಆದೇಶ ಜಾರಿಯಲ್ಲಿರಲಿದೆ. ಐದು ಜನರಿಗಿಂತ ಹೆಚ್ಚು ಜನ ಗುಂಪು ಸೇರುವುದು, ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ರಸ್ತೆ ತಡೆ, ಪ್ರಚೋದನಾತ್ಮಕ ಹೇಳಿಕೆ, ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.