ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ಅಪಘಾತ..!

0
9

ಕಠ್ಮಂಡು: ಉತ್ತರಾಖಂಡದ ಗಡಿಯಲ್ಲಿರುವ ನೇಪಾಳದ ಬೈತಾಡಿ ಜಿಲ್ಲೆಯಲ್ಲಿ ಗುರುವಾರ ಭೀಕರ ಬಸ್ ಅಪಘಾತ ಸಂಭವಿಸಿತ್ತು. ಮದುವೆಗೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ 200 ಮೀಟರ್ ಆಳದ ಕಂದಕಕ್ಕೆ ಉರುಳಿತ್ತು. ಈ ಅಪಘಾತದ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. 34 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದ ಮಾಹಿತಿ ತಿಳಿದ ಕೂಡಲೇ ನೇಪಾಳದ ಅಧಿಕಾರಿಗಳು ಮತ್ತು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗಾಯಾಳುಗಳನ್ನು ಬೈತಾಡಿ ಮತ್ತು ದಾದೇಲ್ಧುರಾದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

ನೇಪಾಳದ ಸುದುರ್ಪಾಶ್ಚಿಮ್ ಪ್ರದೇಶದಲ್ಲಿ ನಿನ್ನೆ ಈ ಅಪಘಾತ ಸಂಭವಿಸಿದ್ದು, 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಚಿಕಿತ್ಸೆಯ ಸಮಯದಲ್ಲಿ 5 ಜನರು ಸಾವನ್ನಪ್ಪಿದರು. ಈ ಮೂಲಕ ಸಾವಿನ ಸಂಖ್ಯೆ 13ಕ್ಕೆ ಏರಿದೆ.

ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಬೈತಾಡಿ ಜಿಲ್ಲೆಯ ಪುರ್ಚೌರಿ ಪುರಸಭೆ ಪ್ರದೇಶದಿಂದ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ಪರ್ವತದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ 200 ಮೀಟರ್ ಆಳದ ಕಂದಕಕ್ಕೆ ಬಿದ್ದಾಗ ಈ ಅಪಘಾತ ಸಂಭವಿಸಿದೆ. ಪಶ್ಚಿಮ ನೇಪಾಳದ ಪುರ್ಚೌರಿ -7 ಪ್ರದೇಶದ ಬದ್ಗಾಂವ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳೀಯ ನಿವಾಸಿಗಳು, ನೇಪಾಳದ ಪೊಲೀಸರು ಮತ್ತು ಸಶಸ್ತ್ರ ಪೊಲೀಸ್ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಹಲವಾರು ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಪೊಲೀಸರು ಹೇಳಿದ್ದಾರೆ. ಭಾರ ಹೊತ್ತಿದ್ದ ಬಸ್ ಹತ್ತುತ್ತಿದ್ದಾಗ ಪ್ರೆಶರ್ ಪೈಪ್ ಒಡೆದ ನಂತರ ಅಪಘಾತ ಸಂಭವಿಸಿರಬಹುದು ಎನ್ನಲಾಗಿದೆ.

LEAVE A REPLY

Please enter your comment!
Please enter your name here