ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಪಲ್ಟಿ- ಓರ್ವ ಸಾವು, 12 ಮಂದಿಗೆ ಗಾಯ

0
750


ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮವಾಗಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟು, ಹಲವು ಮಂದಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಇಂದು(ಏ.4) ಮುಂಜಾನೆ ವರದಿಯಾಗಿದೆ.ದುರ್ಘಟನೆಯೂ ನಸುಕಿನ ಜಾವ 5 ಗಂಟೆಗೆ ನಡೆದಿದೆ

ಬೆಂಗಳೂರಿನಿಂದ ಗುರುವಾರ ರಾತ್ರಿ ಹೊರಟಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್, ಶುಕ್ರವಾರ ಮುಂಜಾನೆ ಉಪ್ಪಿನಂಗಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿತ್ತು. ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬರುತ್ತಿದ್ದಂತೆ, ಮುಂಜಾನೆಯ ಸಮಯ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡಿದೆ ಎನ್ನಲಾಗಿದೆ. ಇದರ ಪರಿಣಾಮವಾಗಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದಿದೆ.

ಭೀಕರ ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿದ್ದ ಇತರ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಹಾಗೂ ಗಂಭೀರ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಹಾಗೂ ಇತರ ವಾಹನ ಸವಾರರು ಗಾಯಾಳುಗಳನ್ನು ರಕ್ಷಿಸಿ, ಚಿಕಿತ್ಸೆಗಾಗಿ ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ಸಾಗಿಸಲು ನೆರವಾದರು. ಮೃತಪಟ್ಟ ಪ್ರಯಾಣಿಕರ ಗುರುತು ಇನ್ನೂ ಪತ್ತೆಯಾಗಿಲ್ಲ.

ವಿಷಯ ತಿಳಿದ ತಕ್ಷಣ ಉಪ್ಪಿನಂಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕ್ರೇನ್ ಸಹಾಯದಿಂದ ಬಸ್ಸನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

LEAVE A REPLY

Please enter your comment!
Please enter your name here