ಕಾರ್ಕಳ : ಬೆಳ್ತಂಗಡಿ ತಾಲೂಕಿನಲ್ಲಿ ಎಸ್ ಐ ಆರ್ ಕರ್ತವ್ಯ ನಿರ್ವಹಿಸಲು ತೆರಳಿದ್ದ ಬೂತ್ ಮಟ್ಟದ ಅಧಿಕಾರಿ (ಬಿ ಎಲ್ ಒ) ಅವರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಿರುವುದು ಖಂಡನೀಯ.ಕರ್ತವ್ಯ ನಿರ್ವಹಿಸಲು ತೆರಳಿದ ಸರ್ಕಾರಿ ಅಧಿಕಾರಿಯನ್ನು ಜಾತಿಯ ಹೆಸರಿನಲ್ಲಿ ಅವಮಾನಿಸುವುದು ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ಧವಾದ ಕ್ರತ್ಯವಾಗಿದೆ.
ಜಾತಿ ನಿಂದನೆ ಮತ್ತು ಸಾಮಾಜಿಕ ಅವಮಾನವನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ.ಜಾತಿ ಆಧಾರಿತ ದೌರ್ಜನ್ಯ ಮತ್ತು ಅವಮಾನ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಹ ಕ್ರತ್ಯವಾಗಿದ್ದು ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು.ಸಂವಿಧಾನ ನೀಡಿರುವ ಸಮಾನತೆ,ಗೌರವ ಮತ್ತು ನ್ಯಾಯದ ಹಕ್ಕುಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಹಾಗೂ ಸರ್ಕಾರದ ಜವಾಬ್ದಾರಿಯಾಗಿದೆ.
ಭಾರತದ ಸಂವಿಧಾನದ ಆರ್ಟಿಕಲ್ 14 ಎಲ್ಲರಿಗೂ ಕಾನೂನಿನ ಮುಂದೆ ಸಮಾನತೆ ಹಾಗೂ ಸಮಾನ ಕಾನೂನು ರಕ್ಷಣೆಯನ್ನು ಖಾತರಿಪಡಿಸುತ್ತದೆ.ಆರ್ಟಿಕಲ್ 17 ಅಸ್ಪ್ರಶ್ಯತೆಯನ್ನು ಸಂಪೂರ್ಣವಾಗಿ ರದ್ದುಪಡಿಸಿ ,ಅದರ ಯಾವುದೇ ರೂಪದ ಆಚರಣೆಯನ್ನು ಕಾನೂನುಬಾಹಿರವೆಂದು ಘೋಷಿಸಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

