‘ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಿಸಲಿರುವ ಕಾಕ್ರೋಚ್ ಜನತಾ ಪಾರ್ಟಿ

0
13

ಛತ್ರಪತಿ ಸಂಭಾಜಿನಗರ : ದೇಶದ ವಿವಿಧ ಭಾಗಗಳ ಜನರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳು ಹಾಗೂ ಅಭಿಪ್ರಾಯಗಳನ್ನು ಆಲಿಸುವ ಉದ್ದೇಶದಿಂದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಮುಂದಿನ ತಿಂಗಳಿನಿಂದ ‘ಕ್ಯಾ ಬೋಲ್ತಿ ಪಬ್ಲಿಕ್’ ಎಂಬ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.

ಗುರುವಾರ ಛತ್ರಪತಿ ಸಂಭಾಜಿನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಭಿಯಾನದ ಮೂಲಕ ದೇಶದ ಪ್ರಸ್ತುತ ಪರಿಸ್ಥಿತಿ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ವಿವಿಧ ಸಾಮಾಜಿಕ ಮತ್ತು ಆರ್ಥಿಕ ವಿಷಯಗಳ ಕುರಿತು ಜನರ ಅಭಿಪ್ರಾಯವನ್ನು ನೇರವಾಗಿ ಸಂಗ್ರಹಿಸಲಾಗುವುದು ಎಂದು ಹೇಳಿದರು.

ಈ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಉಲ್ಲೇಖಿಸಿದ ದೀಪ್ಕೆ, ಅದನ್ನು ತಮ್ಮ ಚಳವಳಿಯ ಮಹತ್ವದ ಗೆಲುವು ಎಂದು ಬಣ್ಣಿಸಿದರು. ಕಳೆದ 10–12 ವರ್ಷಗಳಲ್ಲಿ ಜನರಲ್ಲಿ ಉಂಟಾಗಿದ್ದ ಭಯದ ವಾತಾವರಣ ಈಗ ಕಡಿಮೆಯಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಿಜೆಪಿ, ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧಿ ಹಾಗೂ ಪಂಡಿತ್ ಜವಾಹರಲಾಲ್ ನೆಹರೂ ಅವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಆಧಾರವಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದ್ದು, ಭಾರತದ ಸಂವಿಧಾನವೇ ಪಕ್ಷದ ಮೂಲ ಸಿದ್ಧಾಂತ ಎಂದು ಅಭಿಜೀತ್ ದೀಪ್ಕೆ ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖ್ಯ ವಕ್ತಾರ ಸೌರವ್ ದಾಸ್, ವಕ್ತಾರ ಅಶುತೋಷ್ ರಂಕಾ ಸೇರಿದಂತೆ ಪಕ್ಷದ ಇತರ ಪ್ರಮುಖರು ಉಪಸ್ಥಿತರಿದ್ದರು.