ಉಡುಪಿ : ಉಡುಪಿ ಜಿಲ್ಲೆಯ ಜನರು ಸ್ವಯಂಪ್ರೇರಿತರಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದೆ. ತಮಗೆ ಎಷ್ಟು ಸಾಧ್ಯವೋ ಅಷ್ಟು ಸಮಾಜಕ್ಕೆ ಸಹಾಯಹಸ್ತ ಚಾಚುತ್ತಾರೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.
ಉಡುಪಿ ಗಾಂಧಿ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಅತಿ ಹೆಚ್ಚು ರಕ್ತದಾನ ಶಿಬಿರಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ರಕ್ತದಾನ ಸಮಾಜದ ಜೀವಸೆಲೆಯಾಗಿದೆ. ಇನ್ನೊಬ್ಬರ ಜೀವ ಉಳಿಸುವ ಮಹತ್ತರ ಕಾರ್ಯ ಅಭಿನಂದನೀಯ ಎಂದರು.
ಭಾರತೀಯ ವೈದ್ಯ ಮಂಡಳಿ ಉಡುಪಿ ಕರಾವಳಿ ಘಟಕದ ಅಧ್ಯಕ್ಷ ಡಾ.ಅಶೋಕ್ ಕುಮಾರ್ ಕಾಮತ್, ಗಾಂಧಿ ಆಸ್ಪತ್ರೆ ಸ್ಥಾಪಕ ಹರಿಶ್ಚಂದ್ರ, ಲಕ್ಷ್ಮೀ ಹರಿಶ್ಚಂದ್ರ, ಡಾ.ಪಂಚಮಿ, ಡಾ.ವಿದ್ಯಾ ತಂತ್ರಿ ಹಾಗೂ ಜಿಲ್ಲಾ ರಕ್ತನಿಧಿಯ ಮುಖ್ಯಸ್ಥೆ ಡಾ.ವೀಣಾ ಕುಮಾರಿ ಉಪಸ್ಥಿತರಿದ್ದರು. ಆಸ್ಪತ್ರೆಯ ವೈದ್ಯಕಿಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ ಪ್ರಸ್ತಾವನೆಗೈದರು. ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

