ಮಂಗಳೂರು: ನಗರಕ್ಕೆ ಭಾನುವಾರ ಚುನಾವಣಾ ಪ್ರಚಾರಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ. ಕ್ಲಾಕ್ ಟವರ್ ಬಳಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರುಗೋ ಬ್ಯಾಕ್ ಮೋದಿ’ ಘೋಷಣೆಗಳನ್ನು ಕೂಗಿದರು. ಕೇಂದ್ರದಿಂದ ರಾಜ್ಯಕ್ಕೆ ನೀಡಬೇಕಾದ ತೆರಿಗೆ ವಂಚನೆಯನ್ನು ವಿರೋಧಿಸಿ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ರಾಜ್ಯಕ್ಕೆ ಬರಬೇಕಾದ ಬರಪರಿಹಾರ ನೀಡದೆ ಕೇಂದ್ರ ಸರ್ಕಾರ ವಂಚನೆ ಮಾಡಿದೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ. ತೆರಿಗೆ ಪಾಲು ಕಡಿತ ಮಾಡುವುದರಿಂದ ರಾಜ್ಯಕ್ಕೆ ನಲವತ್ತೈದು ಸಾವಿರ ಕೋಟಿ ರೂ ನಷ್ಟವಾಗಿದೆ. ಬರ, ನೆರೆ, ಕೋವಿಡ್ ಮತ್ತಿತರ ಸಂಕಷ್ಟದ ಸಮಯದಲ್ಲಿ ರಾಜ್ಯಕ್ಕೆ ಬರದ ಮೋದಿ, ಈಗ ಯಾಕೆ ಬರುತ್ತಿದ್ದಾರೆ. ಮೋದಿ ಬರುತ್ತಿರುವುದು ರಾಜಕೀಯಕ್ಕಾಗಿ ಹೊರತು ರಾಜ್ಯದ ಜನರ ಹಿತಕ್ಕಾಗಿ ಅಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಎಂಎಲ್ಸಿ ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.